-->
ತಪಾಸಣೆಯೊಂದಿಗೆ ಸೂಕ್ತ ಚಿಕಿತ್ಸೆಗೆ ಸಲಹೆ

ತಪಾಸಣೆಯೊಂದಿಗೆ ಸೂಕ್ತ ಚಿಕಿತ್ಸೆಗೆ ಸಲಹೆ

ಉಡುಪಿ, ನ.23 (ಲೋಕಬಂಧು ವಾರ್ತೆ): ಮಕ್ಕಳು ಹಾಗೂ ಗರ್ಭಿಣಿಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಠಿಕತೆ ಕಂಡುಬರುತ್ತಿದ್ದು, ಅದನ್ನು ನಿರ್ಮೂಲನೆಗೊಳಿಸುವ ಉದ್ದೇಶದಿಂದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಈ ಅಭಿಯಾನದಡಿ ಮೊದಲ ಹಂತದಲ್ಲಿ ಜಿಲ್ಲೆಯ ಒಂದರಿಂದ ಪದವಿ ಪೂರ್ವ ಕಾಲೇಜು ವರೆಗಿನ ಮಕ್ಕಳಲ್ಲಿ ಕಂಡುಬರುವ ರಕ್ತಹೀನತೆ ಹಾಗೂ ಅಪೌಷ್ಠಿಕತೆಯ ತಪಾಸಣೆ ನಡೆಸಿ, ಸೂಕ್ತ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗುವುದು ಎಂದು ಹೆಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ಹೇಳಿದರು.
ಗುರುವಾರ ನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಬೋರ್ಡ್ ಹೈಸ್ಕೂಲ್) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಅನೀಮಿಯಾ ಹಾಗೂ ಅಪೌಷ್ಠಿಕತೆ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಅನೀಮಿಯಾದಿಂದ ಮಕ್ಕಳಿಗೆ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಗರ್ಭಿಣಿಯರಲ್ಲಿ ರಕ್ತ ಹೀನತೆಯಿಂದಾಗಿ ತಾಯಿ ಹಾಗೂ ಮಗು ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಪ್ರತಿಯೊಬ್ಬರೂ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದರು.


ಶಾಲಾ ಕಾಲೇಜುಗಳಲ್ಲಿ ಅನೀಮಿಯಾ ಹಾಗೂ ಅಪೌಷ್ಠಿತೆ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ಏರ್ಪಡಿಸಬೇಕು. ಇಲ್ಲಿ ನೀಡಿದ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಕುಟುಂಬ ಸದಸ್ಯರ ಜೊತೆ ಹಂಚಿಕೊಳ್ಳಬೇಕು. ಮಕ್ಕಳು ಜಂಕ್ ಫುಡ್ ಬಳಕೆ ಕಡಿಮೆ ಮಾಡಿ, ಪೌಷ್ಠಿಕ ಆಹಾರ ಬಳಸುವ ಕುರಿತು ಗಮನಹರಿಸಬೇಕು.


ಹೆಣ್ಣು ಮಕ್ಕಳು ಹಾಗೂ ಗರ್ಭಿಣಿಯರಲ್ಲಿ ರಕ್ತ ಹೀನತೆ ಸಮಸ್ಯೆ ಹೆಚ್ಚಾಗಿ ಕಂಡುಬರುವುದರಿಂದ ಅವರು ಹಸಿ ತರಕಾರಿ, ಸೊಪ್ಪು, ಮೊಳಕೆ ಕಾಳು ಇನ್ನಿತರ ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು ಎಂದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಮಾತನಾಡಿ, ರೋಗ ಗಂಭೀರ ಹಂತ ತಲುಪುವುದಕ್ಕಿಂತ ಮೊದಲು ರೋಗ ಮೊದಲ ಹಂತದಲ್ಲಿದ್ದಾಗಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಸದೃಢ ಆರೋಗ್ಯ ಹೊಂದಿದ ಮಕ್ಕಳಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ.


ಅಭಿಯಾನದಲ್ಲಿ ಅನೀಮಿಯಾ ಹಾಗೂ ಅಪೌಷ್ಠಿಕತೆ ಇರುವ ಮಕ್ಕಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರೊಂದಿಗೆ ಉಡುಪಿ ಜಿಲ್ಲೆಯನ್ನು ಅಪೌಷ್ಠಿಕ ಮತ್ತು ಅನೀಮಿಯಾ ಮುಕ್ತ ಪೌಷ್ಠಿಕ ಜಿಲ್ಲೆಯಾಗಿಸಲು ಪ್ರಯತ್ನಿಸೋಣ ಎಂದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಿ ಅನೀಮಿಯಾ ಹಾಗೂ ಅಪೌಷ್ಠಿಕತೆ ಬಗ್ಗೆ ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕ ಮಂಜುನಾಥ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ನಿರೂಪಣಾಧಿಕಾರಿ ಬಿ. ಎಚ್ ಕೃಷ್ಣಪ್ಪ ಮೊದಲಾದವರಿದ್ದರು.


ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಪ್ರಶಾಂತ ಭಟ್ ಸ್ವಾಗತಿಸಿದರು. ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರಕಲಾ ನಿರೂಪಿಸಿ, ಕಾಲೇಜಿನ ಪ್ರಾಂಶುಪಾಲೆ ಲೀಲಾ ಭಟ್ ವಂದಿಸಿದರು.

Ads on article

Advertise in articles 1

advertising articles 2

Advertise under the article