.jpg)
Coastal Development: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ, ರುದ್ರಭೂಮಿ ವಿದ್ಯುತ್ ಚಿತಾಗಾರ ನಿರ್ಮಾಣ ಸಮಾಲೋಚನಾ ಸಭೆ
Saturday, November 18, 2023
ಉಡುಪಿ, ನ.18 (ಲೋಕಬಂಧು ವಾರ್ತೆ): ಕರಾವಳಿ ಕರ್ನಾಟಕದಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಹಾಗೂ ರುದ್ರ ಭೂಮಿ ವಿದ್ಯುತ್ ಚಿತಾಗಾರಗಳ ನಿರ್ಮಾಣ ಬಗ್ಗೆ ಸಮಾಲೋಚನಾ ಸಭೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಶ್ರಯದಲ್ಲಿ ಶನಿವಾರ ಇಲ್ಲಿನ ಹೋಟೆಲ್ ಕಿದಿಯೂರು ಶೇಷಶಯನ ಸಭಾಗೃಹದಲ್ಲಿ ನಡೆಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಅದನ್ನು ಸದ್ಬಳಕೆ ಮಾಡಿಕೊಂಡಲ್ಲಿ ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕಾಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಬೇಕು ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ
ವಿಷಯ ಮಂಡಿಸಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಜಿಲ್ಲಾಧ್ಯಕ್ಷ ಡಿ. ಆರ್. ರಾಜು ಕಾರ್ಕಳ, ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಕರಾವಳಿ ಕರ್ನಾಟಕದ ಉಳ್ಳಾಲದಿಂದ ಕಾರವಾರ ವರೆಗಿನ ಸುಮಾರು 320 ಕಿ.ಮೀ. ಸಮುದ್ರ ತೀರ ನಿರಂತರವಾಗಿ ಪ್ರತೀವರ್ಷ ಕಡಲ್ಕೊರೆತದ ಹೊಡೆತಕ್ಕೆ ಸಿಲುಕಿದ್ದರೂ ಈವರೆಗೂ ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ.
ಅದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಸಂಪರ್ಕ ರಸ್ತೆ ಚತುಷ್ಪಥ
ಅಭಿವೃದ್ಧಿ ವಿಚಾರದಲ್ಲಿ ಕರಾವಳಿಯ ಜಿಲ್ಲೆಗಳು ತೀರಾ ಹಿಂದುಳಿದಿವೆ. ಪ್ರಮುಖವಾಗಿ ನಮ್ಮ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ ಪಶ್ಚಿಮ ಘಟ್ಟ ಶ್ರೇಣಿಯ ರಸ್ತೆಗಳ ಅಭಿವೃದ್ಧಿಯಾಗಬೇಕು.
ಎಲ್ಲಾ ಪ್ರಮುಖ ಸಂಪರ್ಕ ರಸ್ತೆಗಳು ಚತುಷ್ಪಥ ರಸ್ತೆಗಳಾದರೆ ಮೂಲಸೌಕರ್ಯ ಅಭಿವೃದ್ಧಿಯಾಗುತ್ತದೆ. ಜೊತೆಗೆ ಪ್ರವಾಸೋದ್ಯಮವೂ ಬೆಳೆಯಲು ಸಾಧ್ಯವಿದೆ ಎಂದರು.
ಕಡಲ್ಕೊರೆತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರ ತಾಂತ್ರಿಕ ಪರಿಣಿತ ತಂತ್ರಜ್ಞರ ಜೊತೆ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ.
ಕರಾವಳಿ ಜಿಲ್ಲೆಗಳ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಅವಿಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಉದ್ಯೋಗದಾತ ಹೊಸ ಕಂಪೆನಿಗಳು ಬರಬೇಕು. ಈಗಿರುವ ವಿದ್ಯುತ್ ಕಂಪೆನಿಗಳಲ್ಲಿ ಶೇ. 95ರಷ್ಟು ಹೊರ ರಾಜ್ಯದವರೇ ತುಂಬಿದ್ದು ಸ್ಥಳೀಯರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳು ಬೆಳೆಯಬೇಕಿದೆ.
ಅಲ್ಲದೇ ಪರಿಸರ ಸಂರಕ್ಷಣೆ, ನೆಲ, ಜಲ ಸಂರಕ್ಷಣೆಯಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಅರಣ್ಯ ನಾಶ ತಡೆಯುವ ನಿಟ್ಟಿನಲ್ಲಿ ರುದ್ರಭೂಮಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಾಣ ಮಾಡಬೇಕು ಎನ್ನುವುದು ಸರ್ಕಾರಕ್ಕೆ ನಮ್ಮ ಒತ್ತಾಯವಾಗಿದೆ ಎಂದರು.
ಮಹಾರಾಷ್ಟ್ರ ಮಾದರಿ ಅನುಸರಿಸಿ
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕ್ರಷ್ಣ ಶೆಟ್ಟಿ ಮಾತನಾಡಿ, ಕಳೆದ 40 ವರ್ಷಗಳಿಂದ ಸರ್ಕಾರಗಳು ಕಡಲ್ಕೊರೆತ ಬಗ್ಗೆ ಕೆಲಸ ಮಾಡುತ್ತಾ ಬಂದಿದ್ದರೂ ಸಮಸ್ಯೆ ಬಗೆಹರಿದು
ಸಮುದ್ರಕ್ಕೆ ಹಾಕಿದ ಕಲ್ಲುಗಳು ಭೂಮಟ್ಟಕ್ಕೆ ತಲುಪುತ್ತಿಲ್ಲ. ಮಹಾರಾಷ್ಟ್ರ ಮಾದರಿಯಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.
ವಿದ್ಯುತ್ ಚಿತಾಗಾರ ನಿರ್ಮಾಣ
ರುದ್ರಭೂಮಿಗಳಲ್ಲಿ ವಿದ್ಯುತ್ ಚಿತಾಗಾರ ರಚಿಸಲು ಸರಕಾರ ಮುಂದಾಗಬೇಕು. ಆ ಮೂಲಕ ಪರಿಸರ ಹಾಗೂ ಅರಣ್ಯ ಸಂಪತ್ತನ್ನು ಉಳಿಸುವ ಕೆಲಸ ಆಗಬೇಕಿದೆ. ಮಾತ್ರವಲ್ಲದೆ ವಿದ್ಯುತ್ ಚಿತಾಗಾರದ ಸಾಮಾಗ್ರಿಗಳಿಗೆ ಸಬ್ಸಿಡಿ ನೀಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಉಪಾಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲಿಯಾನ್, ಗೌರವ ಕೋಶಾಧಿಕಾರಿ ತುಳಸಿದಾಸ್ ಎಲ್. ಅಮೀನ್, ಪ್ರದೀಪ್ ಎನ್.ಆರ್. ಕಾರ್ಕಳ, ಗೌರವ ಕಾರ್ಯದರ್ಶಿಗಳಾದ ಅರುಣ್ ಪ್ರಕಾಶ್ ಶೆಟ್ಟಿ, ಪ್ರೊ. ಶಂಕರ್, ಮಾಜಿ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ, ಧರ್ಮಪಾಲ್ ಯು. ದೇವಾಡಿಗ ಉಪಸ್ಥಿತರಿದ್ದರು.