.jpg)
Diarrhea: ಸಣ್ಣ ಮಕ್ಕಳಲ್ಲಿ ಅತಿಸಾರ ಬೇದಿ ಪ್ರಕರಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಿ
Wednesday, November 15, 2023
ಉಡುಪಿ, ನ.15 (ಲೋಕಬಂಧು ವಾರ್ತೆ): ಸಣ್ಣ ಮಕ್ಕಳಲ್ಲಿ ಅತಿಸಾರ ಬೇದಿ ಉಂಟಾದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸುವುದರಿಂದ ಮಕ್ಕಳು ಉತ್ತಮ ಆರೋಗ್ಯದಿಂದಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.
ಬುಧವಾರ ಜಿಲ್ಲಾ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ತೀವ್ರತರ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕ, ನವಜಾತ ಶಿಶು ವಾರ ಹಾಗೂ ನ್ಯೂಮೋನಿಯಾ ಕೊನೆಗೊಳಿಸುವಲ್ಲಿ ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅತಿಸಾರ ಬೇದಿ ಹಿನ್ನೆಲೆಯಲ್ಲಿ ಮಕ್ಕಳ ಸಾವುಗಳು ಹೆಚ್ಚಾಗುತ್ತಿವೆ. ಅದನ್ನು ತಪ್ಪಿಸಲು ಸರ್ಕಾರ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಆರೋಗ್ಯ ಶಿಕ್ಷ ಣ ಕುರಿತು ಮಾಹಿತಿ ನೀಡುವ ಜೊತೆಗೆ ಆ ಸಂದರ್ಭದಲ್ಲಿ ಜನರು ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂಬ ಪ್ರಾತ್ಯಕ್ಷಿಕೆಯನ್ನೂ ನೀಡಲಾಗುತ್ತಿದೆ ಎಂದರು.
ನವಜಾತ ಶಿಶುಗಳಿಗೆ ತಾಯಂದಿರು ತಪ್ಪದೇ ಎದೆ ಹಾಲನ್ನು ಕುಡಿಸಬೇಕು. ಅದರಿಂದಾಗಿ ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಅದರ ಜೊತೆಯಲ್ಲಿ ಆರು ತಿಂಗಳ ನಂತರ ಪೌಷ್ಠಿಕ ಆಹಾರ ನೀಡಿದ್ದಲ್ಲಿ ಮಕ್ಕಳು ಸದೃಢರಾಗಿ ಬೆಳೆಯಲು ಸಹಕಾರಿಯಾಗುವ ಜೊತೆಗೆ ಸಮಾಜದಲ್ಲಿ ಆರೋಗ್ಯ ಸುಧಾರಣೆ ಆಗುತ್ತದೆ ಎಂದರು.
ಮಾಹಿತಿ ಕರಪತ್ರ ಬಿಡುಗಡೆಗೊಳಿಸಿದ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಲ್ಲಿ ಮಾತ್ರ ಜನರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.
ತೀವ್ರತರ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕ, ನ್ಯಮೂನೋನಿಯಾ ತಡೆಗಟ್ಟುವಿಕೆ ಮತ್ತಿತರ ಆರೋಗ್ಯ ಸೇವೆಗಳನ್ನು ಸಮುದಾಯದ ಸಹಭಾಗಿತ್ವದಲ್ಲಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಪ್ರಭಾರ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆರ್.ಎಂ.ಓ ಡಾ. ವಾಸುದೇವ, ಡಾ. ವೇಣುಗೋಪಾಲ್, ಡಾ. ರಾಜಗೋಪಾಲ ಭಂಡಾರಿ, ಡಾ. ಮಹಾದೇವ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಮೊದಲಾದವರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಸ್ವಾಗತಿಸಿ, ಡಾ. ವೇಣುಗೋಪಾಲ್ ವಂದಿಸಿದರು.