.jpg)
Gangolli: ಬೋಟ್ ಅಗ್ನಿ ದುರಂತ: ತಲಾ 50 ಲಕ್ಷ ಪರಿಹಾರ ನೀಡಲು ಆಗ್ರಹ
Monday, November 13, 2023
ಕುಂದಾಪುರ, ನ.13 (ಲೋಕಬಂಧು ವಾರ್ತೆ): ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸೋಮವಾರ ನಡೆದ ಬೋಟ್ ಅಗ್ನಿ ಅವಘಡದಿಂದ ಹಾನಿಗೀಡಾದ ಸ್ಥಳಕ್ಕೆ ಶಾಸಕರಾದ ಯಶಪಾಲ್ ಸುವರ್ಣ ಮತ್ತು ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ, ಅಗ್ನಿ ಅವಘಡದಿಂದ ಸುಮಾರು 10 ಕೋಟಿಯಷ್ಟು ನಷ್ಟ ಉಂಟಾಗಿದ್ದು, ರಾಜ್ಯ ಸರಕಾರ ಕೂಡಲೇ ಬೋಟ್ ಮಾಲೀಕರಿಗೆ ತಲಾ 50 ಲಕ್ಷ ಪರಿಹಾರ ನೀಡಿ ಸಂಕಷ್ಟಕ್ಕೀಡಾದ ಮೀನುಗಾರರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಐವರು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜೊತೆಯಾಗಿ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ವಿಶೇಷ ಪ್ರಕರಣದಡಿ ಗರಿಷ್ಠ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು.
ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಕರಾವಳಿಯ ಎಲ್ಲಾ ಮೀನುಗಾರಿಕೆ ಬಂದರುಗಳಲ್ಲಿ ಬೋಟ್ ರಿಪೇರಿಗೆ ತಂಗುವ ಸ್ಥಳ ನಿಗದಿ ಮಾಡಿ ಅಗ್ನಿಶಾಮಕ ಘಟಕ ಸಹಿತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾಸ್ಟರ್ ಪ್ಲಾನ್ ಮಾಡಲು ಮೀನುಗಾರಿಕೆ ಇಲಾಖೆ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.