ಯೋಧ ಪ್ರಾಂಜಲ್ ಹುತಾತ್ಮ
Thursday, November 23, 2023
ಶ್ರೀನಗರ, ನ.23 (ಲೋಕಬಂಧು ವಾರ್ತೆ): ಜಮ್ಮು ಕಾಶ್ಮೀರದ ರಜೆರಿಯಲ್ಲಿ ಬುಧವಾರ ಸೇನಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧರ ಪೈಕಿ ಮಂಗಳೂರು ಮೂಲದ ಎಂ.ವಿ. ಪ್ರಾಂಜಲ್ ಒಬ್ಬರು.
ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ವೆಂಕಟೇಶ್ ಮತ್ತು ಅನುರಾಧ ದಂಪತಿಯ ಏಕೈಕ ಪುತ್ರ 28 ವರ್ಷದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಹುತಾತ್ಮರಾಗಿದ್ದಾರೆ.
ಮಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದ ಪ್ರಾಂಜಲ್, ಡಿಪಿಎಸ್ ಎಂಆರ್ಪಿಎಲ್ ಸ್ಕೂಲ್ನಲ್ಲಿ ಎಲ್ಕೆಜಿಯಿಂದ ಹತ್ತನೇ ತರಗತಿ ವರೆಗೆ ವಿದ್ಯಾಭ್ಯಾಸ ಪೂರೈಸಿ ಬಳಿಕ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.
ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್ನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದು ಸೇನೆಗೆ ಸೇರಿದ್ದರು.
ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್ ವಿವಾಹವಾಗಿದ್ದರು.
ಬುಧವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೇರಿಯಲ್ಲಿ ಉಗ್ರರ ನಿಗ್ರಹಕ್ಕಾಗಿ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿದಂತೆ 4 ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಉಗ್ರ ರಿಗಾಗಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ.