
ಜಾತಿ ನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
Wednesday, July 3, 2024
ಜಾತಿ ನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ತೆಂಕನಿಡಿಯೂರು ಜಾತಿ ನಿಂದನೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅಗ್ರಹಿಸಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬುಧವಾರ ಮನವಿ ನೀಡಲಾಯಿತು.
ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲೆದೋರಿರುವ ಮೂಲಭೂತ ಸಮಸ್ಯೆಯೊಂದರ ಪರಿಹಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿರಣ್ ಪಿಂಟೊ ಹಾಗೂ ಇತರರ ಮೇಲೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಜಾತಿ ನಿಂದನೆಯ ದೂರು ನೀಡಿದ್ದು, ಆ ದೂರು ಸಂಪೂರ್ಣ ಸುಳ್ಳು ಎಂದು ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ತಿಳಿಸಿದ್ದಾರೆ.
ಕಿರಣ್ ಪಿಂಟೊ ಅವರನ್ನು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಸ್ಥಾನದಿಂದ ಕೆಳಗಿಳಿಸಲು ಹಾಗೂ ತನ್ನ ಮೇಲೆ ನೀಡಿದ ದೂರಿನ ಬಗ್ಗೆ ರಕ್ಷಣೆಗಾಗಿ ಇತರರ ಮೇಲೆ ಶೋಭಾ ಡಿ. ನಾಯ್ಕ್ ಸುಳ್ಳು ದೂರು ನೀಡಿದ್ದಾರೆ.
ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ವಿಷಯ ಪ್ರಸ್ತಾವಿಸಿ 13 ಮಂದಿ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಅಧಿಕಾರಿಗಳು ತನಿಖೆ ನಡೆಸಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ತರಾಟೆಗೆ ತೆಗೆದುಕೊಂಡ ಪರಿಣಾಮ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಸ್ಯೆ ಕೂಡಲೇ ಬಗೆಹರಿಸುವುದಾಗಿ ಹೇಳಿದ್ದರು.
ಅವರ ವಿರುದ್ಧ ನೀಡಿದ ದೂರಿಗೆ ಪ್ರತಿಯಾಗಿ ಕಿರಣ್ ಪಿಂಟೊ ಹಾಗೂ ಇತರರ ಮೇಲೆ ಜಾತಿ ನಿಂದನೆಯ ಸುಳ್ಳು ದೂರು ದಾಖಲು ಮಾಡಿ ಜಾತಿ ನಿಂದನೆಯ ಕಾನೂನನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ.
ಆದ್ದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ನೀಡಿರುವ ದೂರನ್ನು ಯಾರ ಒತ್ತಡಕ್ಕೂ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಿರುವುದಾಗಿ ರುಡಾಲ್ಫ್ ಡಿ'ಸೋಜ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ನವೀನ್ ಡಿ'ಸೋಜ, ಜಾನ್ಸನ್ ಡಿ'ಸೋಜ, ಒಲಿವರ್ ಡಿ'ಸೋಜ ಮತ್ತು ಅನಿಲ್ ಅಂಬಲಪಾಡಿ ಇದ್ದರು.