-->
ಪರಿಸರ ಸಂರಕ್ಷಣೆಗೆ ಎಲ್ಲರ ಹೊಣೆ

ಪರಿಸರ ಸಂರಕ್ಷಣೆಗೆ ಎಲ್ಲರ ಹೊಣೆ

ಪರಿಸರ ಸಂರಕ್ಷಣೆಗೆ ಎಲ್ಲರ ಹೊಣೆ

ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು

ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದು ಕಷ್ಟದ  ಕೆಲಸವೇನಲ್ಲ. ಆದರೆ, ಎಲ್ಲರೂ ಮನಸ್ಸು ಮಾಡಬೇಕು. ಪರಿಸರ ರಕ್ಷಣೆ ಎಲ್ಲರ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ’ ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಅದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಸಾಧ್ಯ. ಎಲ್ಲರೂ ಪರಿಸರ ಪ್ರೇಮಿಗಳಾಗಿ ನೈರ್ಮಲ್ಯ ಕಾಪಾಡಿಕೊಳ್ಳೋಣ ಎಂದರು.
ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಪರಿಸರ ರಕ್ಷಣೆಯಲ್ಲಿ ಕೈಜೋಡಿಸಬೇಕು.


ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಪರಿಸರ, ಕಾಡು, ಜನಜೀವನ, ಪ್ರಾಣಿ ಸಂಕುಲಗಳ ಬಗ್ಗೆ ತಿಳಿಸಬೇಕು.


ಮನುಷ್ಯರಂತೆ ಪ್ರಾಣಿ, ಪಕ್ಷಿ, ಸಸ್ಯ ಸಂಕುಲಕ್ಕೂ ಬದುಕುವ ಹಕ್ಕಿದೆ. ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.


ಶುದ್ಧ ಕುಡಿಯುವ ನೀರು ಪೂರೈಕೆಗೆ ಬದ್ಧ
ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ.


ಇತ್ತೀಚೆಗೆ ಕಲುಷಿತ ನೀರಿನಿಂದ ಅನೇಕರು ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ. ಶುದ್ಧ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಈಗಾಗಲೇ ಎಚ್ಚರಿಕೆ ನೀಡಲಾಗಿದೆ.


ಶುದ್ಧ ಕುಡಿಯುವ ನೀರಿನ ಸರಬರಾಜಿನ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.


ಡೆಂಗಿ ನಿಯಂತ್ರಣಕ್ಕೆ ಕೈಜೋಡಿಸಿ
ಇತ್ತೀಚೆಗೆ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಅದರ ನಿರ್ಮೂಲನೆ ಸಾಧ್ಯ ಎಂದರು.


ಸಂಶೋಧನೆಗಳು ಸರಿಯಾದ ದಿಕ್ಕಿನಲ್ಲಿರಲಿ
ನಿಸರ್ಗವನ್ನು ಪ್ರೀತಿಸುವ ಮನಸನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ನಿಸರ್ಗ ಕಾಪಾಡುವುದು ಕಷ್ಟವೇನಿಲ್ಲ. ಅದನ್ನು ಪ್ರೀತಿಸುವ ಪ್ರವೃತ್ತಿ ಅಗತ್ಯ. ಒಂದು ಮರ ಕಡಿದರೆ ಮತ್ತೊಂದು ನೆಡಬೇಕು. ಕಾಡು ಬೆಳೆಸಬೇಕು.


ಕಳೆದ 20 ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲವನ್ನು ನಾವು ಎದುರಿಸುತ್ತಿದ್ದು ಅದರ ಕಾರಣಗಳ ಬಗ್ಗೆ ಸಂಶೋಧನೆಗಳು ಅಗತ್ಯ.


ಸಂಶೋಧನೆಗಳು ಸರಿಯಾದ ದಾರಿಯಲ್ಲಿ ನಡೆಯಬೇಕು ಹಾಗೂ ಸಂಶೋಧನಾ ಕೇಂದ್ರಗಳೂ ಹೆಚ್ಚಾಗಬೇಕು.


ಯಾವ ಭಾಗದಲ್ಲಿ ಯಾವ ರೀತಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಬೇಕೆನ್ನುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗಮನಹರಿಸಬೇಕು ಎಂದು ಸಿಎಂ ಸೂಚಿಸಿದರು.


ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article