ಪತ್ರಿಕೆಗಳ ಓದು ಜ್ಞಾನಾರ್ಜನೆಗೆ ಪೂರಕ
Monday, July 22, 2024
ಪತ್ರಿಕೆಗಳ ಓದು ಜ್ಞಾನಾರ್ಜನೆಗೆ ಪೂರಕ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪತ್ರಿಕೆಗಳಿಂದ ವಿಶ್ವದಲ್ಲಿ ನಡೆಯುವ ಪ್ರಸ್ತುತ ಸುದ್ದಿಗಳು, ರಾಜಕೀಯ ಬೆಳವಣಿಗೆಗಳು, ಆವಿಷ್ಕಾರಗಳು ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಯಬಹುದು. ಅದು ಜ್ಞಾನಾರ್ಜನೆ ಸಹಕಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಅಜ್ಜರಕಾಡು ಡಾ.ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪತ್ರಿಕೋದ್ಯಮ ಸಮಾಜದ ಆಗುಹೋಗುಗಳ ಜೊತೆಗೆ ಜನ ಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯಾಗಿದೆ.
ಇಂದಿನ ಸಂದರ್ಭದಲ್ಲಿ ಎಲೆಕ್ಟ್ರಾನಿಕ್, ಸೋಶಿಯಲ್ ಮೀಡಿಯಾಗಳ ಮಧ್ಯೆ ಪತ್ರಿಕೋದ್ಯಮ ಕೂಡಾ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.
ಕೋವಿಡ್ ಸಂದರ್ಭದಲ್ಲಿ ಅನೇಕ ಪತ್ರಿಕೆಗಳು ಸಂಕಷ್ಟಕ್ಕೀಡಾಗಿದ್ದು, ಕೋವಿಡ್ ನಂತರದ ದಿನಗಳಲ್ಲಿ ಚೇತರಿಸಿಕೊಳ್ಳುತ್ತಿದೆ.
ಪತ್ರಿಕೆಗಳು ದಿನನಿತ್ಯದ ಮಾಹಿತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ವಿಷಯಗಳ ಕುರಿತು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ವಿಷಯಗಳನ್ನೂ ತಲುಪಿಸುತ್ತಿದ್ದು, ಆ ಮೂಲಕ ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಸುದ್ದಿ ಬಿತ್ತರಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ ಎಂದರು.
ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯ ನಾಗರಾಜ್ ಉಪನ್ಯಾಸ ನೀಡಿ, ದೇಶ ಹಾಗೂ ರಾಜ್ಯದಲ್ಲಿ ಪತ್ರಿಕೋದ್ಯಮ ಬೆಳೆದುಬಂದ ಹಾದಿಯನ್ನು ಸವಿಸ್ತಾರವಾಗಿ ವಿವರಿಸಿದರು.
ದಿನದಿಂದ ದಿನಕ್ಕೆ ಪತ್ರಿಕೋದ್ಯಮ ಬೆಳವಣಿಗೆ ಕಂಡುಕೊಳ್ಳುತ್ತಿದೆ. ಈಮಧ್ಯೆ ಅನೇಕ ಸವಾಲುಗಳನ್ನೂ ಎದುರಿಸುತ್ತಲೇ ಪತ್ರಿಕೋದ್ಯಮ ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ.
ಪ್ರತಿದಿನ ಹೊಸತನ್ನು ಕಲಿಯಲು ಪತ್ರಿಕೋದ್ಯಮ ಪ್ರೇರೇಪಿಸುತ್ತದೆ. ಯಾವುದೇ ರೀತಿಯ ಸವಾಲು ಎದುರಿಸಲು ಧೈರ್ಯ ತುಂಬುವ ಶಕ್ತಿ ಪತ್ರಿಕೋದ್ಯಮ ಕ್ಷೇತ್ರಕ್ಕಿದೆ.
ಈ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಕೇವಲ ಜರ್ನಲಿಸಂ ಪದವಿ ಹೊಂದಿದವರಲ್ಲದೇ ಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಹಾಗೂ ಉತ್ತಮ ಬರವಣಿಗೆ ಶೈಲಿ ಹೊಂದಿರುವವರೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು ಎಂದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ ಜನಸಾಮಾನ್ಯರಿಗೆ ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕಾಲಕ್ಕೆ ತಕ್ಕಂತೆ ಆದ ಬದಲಾದ ವೈಖರಿ ಹಾಗೂ ಪ್ರಸ್ತುತ ವೃತ್ತಿಯಲ್ಲಿ ತೊಡಗಿಕೊಂಡವರು ಮಾಡಿಕೊಳ್ಳಬೇಕಾದ ಬದಲಾವಣೆ ಕುರಿತು ಅವಲೋಕನ ಮಾಡಿಕೊಳ್ಳಲು ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಮಾನವನ ಸರ್ವತೋಮುಖ ಅಭಿವೃದ್ಧಿ, ಬೆಳವಣಿಗೆಯಲ್ಲಿ ಪತ್ರಿಕೋದ್ಯಮ ಮಹತ್ತರ ಪಾತ್ರ ವಹಿಸುವುದರೊಂದಿಗೆ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ತನ್ನದೇ ಆದ ಪಾತ್ರ ವಹಿಸಿದೆ. ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದೇ ಪತ್ರಿಕಾರಂಗ ಪರಿಗಣಿಸಲ್ಪಟ್ಟಿದೆ. ಪತ್ರಿಕಾ ಧರ್ಮವನ್ನು ಪ್ರತಿಯೊಬ್ಬ ಪತ್ರಕರ್ತರೂ ಬದ್ಧತೆಯಿಂದ ಪಾಲಿಸಿದ್ದಲ್ಲಿ ಸಮಾಜದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ತಳವೂರಲು ಸಾಧ್ಯವಾಗುತ್ತದೆ ಎಂದರು.
ಅಭ್ಯಾಗತರಾಗಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪತ್ರಿಕೆಗಳನ್ನು ಕೊಂಡು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕಾಲೇಜಿನ ಕಲಾ ನಿಕಾಯ ಡೀನ್ ಡಾ| ನಿಕೇತನ ಇದ್ದರು.
ಪತ್ರಕರ್ತ ಅಜಿತ್ ಸನ್ಮಾನಿತರನ್ನು ಪರಿಚಯಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿನಿ ಅಶ್ವಿನಿ ನಿರೂಪಿಸಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು, ಕಾಲೇಜು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು