
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮೇಲ್ದರ್ಜೆಗೆ
Thursday, July 18, 2024
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮೇಲ್ದರ್ಜೆಗೆ
ಲೋಕಬಂಧುನ್ಯೂಸ್ ಡೆಸ್ಕ್, ಮಂಗಳೂರು
ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲು ಬುಧವಾರ ಭೇಟಿ ನೀಡಿದ್ದ ಅವರು, ಸೆಂಟ್ರಲ್ ರೈಲು ನಿಲ್ದಾಣ ಹಾಗೂ ಕಂಕನಾಡಿಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಸೌಕರ್ಯಗಳನ್ನು ಪರಿಶೀಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೆ ಸೌಕರ್ಯ ಆಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಕೇರಳ ಹಾಗೂ ಗೋವಾ, ತಮಿಳುನಾಡು ಮತ್ತು ಮಹಾರಾಷ್ಟ್ರ ನಡುವೆ ಮಂಗಳೂರು, ಕಾರವಾರ ಭಾಗದಲ್ಲಿ ರೈಲ್ವೆ ಸೌಕರ್ಯ ಅಭಿವೃದ್ಧಿ ನಿರೀಕ್ಷಿತ ರೀತಿಯಲ್ಲಿ ನಡೆದಿಲ್ಲ.
ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕರಾವಳಿಯ ರೈಲು ಮೂಲಸೌಕರ್ಯ ಅಭಿವೃದ್ಧಿಗೆ ಎರಡು ತಿಂಗಳಲ್ಲಿ ನೀಲನಕ್ಷೆ ತಯಾರಿಸಲಿದ್ದೇವೆ ಎಂದರು.
ಪಾಲಕ್ಕಾಡ್ ವಿಭಾಗದ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರಿನಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಸೌಕರ್ಯಗಳ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಸಂಸದರಾದ ಬ್ರಿಜೇಶ್ ಚೌಟ ಮತ್ತು ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರು ಭಾಗವಹಿದ್ದರು.