
ಸಮುದ್ರ ತೀರಕ್ಕೆ ಬಂದು ಚಿಕ್ಕಿ ತಿಂದು ಹೋದಂತಾಯ್ತು ಸಚಿವೆಯ ಪ್ರಾಕೃತಿಕ ವಿಕೋಪ ವೀಕ್ಷಣೆ!
Sunday, July 21, 2024
ಸಮುದ್ರ ತೀರಕ್ಕೆ ಬಂದು ಚಿಕ್ಕಿ ತಿಂದು ಹೋದಂತಾಯ್ತು ಸಚಿವೆಯ ಪ್ರಾಕೃತಿಕ ವಿಕೋಪ ವೀಕ್ಷಣೆ!
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಜಿಲ್ಲೆಯ ಜನತೆಯ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ಅಧಿಕಾರಿಗಳೊಂದಿಗೆ ನಡೆಸಿದ ಪ್ರಾಕೃತಿಕ ವಿಕೋಪ ಹಾನಿ ವೀಕ್ಷಣೆ, ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು ಚಿಕ್ಕಿ ತಿಂದಂತಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಲೇವಡಿ ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ಐವರು ಬಿಜೆಪಿ ಶಾಸಕರು ಎಂಬ ಏಕೈಕ ಕಾರಣದಿಂದ ಸ್ಥಳೀಯ ಶಾಸಕರಿಗೆ ಯಾವುದೇ ಮಾಹಿತಿ ನೀಡದೇ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಯ ಪ್ರಹಸನ ಮಾಡಿದ್ದಾರೆ.
ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಹಾನಿ ಬಗ್ಗೆ ಸಭೆ ನಡೆಸಿ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ವಹಿಸಿಲ್ಲ.
ಕಾಪು, ಉಡುಪಿ, ಕುಂದಾಪುರ, ಬೈಂದೂರು, ಕಾರ್ಕಳ ಕ್ಷೇತ್ರದಲ್ಲಿಯೂ ಮಳೆಯಿಂದ ವ್ಯಾಪಕ ಆಸ್ತಿಪಾಸ್ತಿ ನಷ್ಟ, ಕಡಲ್ಕೊರೆತ, ಬೆಳೆ ಹಾನಿ, ಗುಡ್ಡ ಜರಿತದಂಥ ಘಟನೆ ನಡೆದಿದ್ದರೂ ಜಿಲ್ಲೆಯ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಈಗಾಗಲೇ ಶಾಸಕರಾದ ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಸ್ತುವಾರಿ ಸಚಿವರು ಈಗಾಗಲೇ ಹಲವು ಬಾರಿ ಘೋಷಿಸಿರುವ ಕಡಲ್ಕೊರೆತ ತಡೆಗೆ 5 ಕೋಟಿ ಅನುದಾನ, ಪರ್ಯಾಯ ಮಹೋತ್ಸವದ ವಿಶೇಷ 10 ಕೋಟಿ ಅನುದಾನ ಇನ್ನೂ ಮರೀಚಿಕೆಯಾಗಿದೆ.
ಕಳೆದ 14 ತಿಂಗಳಲ್ಲಿ ಉಸ್ತುವಾರಿ ಸಚಿವರು ಕೇವಲ ಒಂದು ಜಿಲ್ಲಾ ಪ್ರಗತಿ ಪರಿಶೀಲನ ಸಭೆ ಮಾಡಿದ್ದಾರೆ. ತನ್ನ ಅವಧಿಯಲ್ಲಿ ಜಿಲ್ಲೆಗೆ ಬಂದ ಅನುದಾನಗಳ ಬಗ್ಗೆ ದಾಖಲೆ ನೀಡಿದರೆ ಬಹಿರಂಗ ಚರ್ಚೆಗೂ ಬದ್ದನಾಗಿದ್ದು, ಉಡುಪಿಯ ಜನತೆಗೆ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರದ ಮೇಲೆ ಯಾವುದೇ ನಿರೀಕ್ಷೆ ನಂಬಿಕೆ ಉಳಿದಿಲ್ಲ ಎಂದು ಯಶಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.