-->
ಇಸ್ಲಾಮಿಗೆ ಮತಾಂತರ ಕಿರುಕುಳ ಪ್ರಕರಣ ಎನ್ಐಎಗೊಪ್ಪಿಸಲು ಆಗ್ರಹ

ಇಸ್ಲಾಮಿಗೆ ಮತಾಂತರ ಕಿರುಕುಳ ಪ್ರಕರಣ ಎನ್ಐಎಗೊಪ್ಪಿಸಲು ಆಗ್ರಹ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಇಸ್ಲಾಮಿಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ನ ದುರ್ಗಾ ವಾಹಿನಿ ಮಾತೃಶಕ್ತಿ ಸದಸ್ಯೆಯರು ಗುರುವಾರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ‌ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.
ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ಹೊರ ರಾಜ್ಯದ ಹಿಂದೂ ವಿದ್ಯಾರ್ಥಿನಿಗೆ ಅದೇ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ವೈದ್ಯ ಮಹಮ್ಮದ್ ಡ್ಯಾನಿಶ್ ಖಾನ್, ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡಿದ್ದಾನೆ ಎಂದು ಯುವತಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ಮುಸ್ಲಿಂ ಯುವಕ ಪ್ರೀತಿಯ ಹೆಸರಿನಲ್ಲಿ ಹಿಂದೂ ವಿದ್ಯಾರ್ಥಿನಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದು ಮಾತ್ರವಲ್ಲದೇ ದೈಹಿಕ ಹಿಂಸೆ, ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.


ದೇಶದಾದ್ಯಂತ ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಪ್ರೀತಿಯ ಹೆಸರಿನಲ್ಲಿ ಮತಾಂತರ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಈ ರೀತಿ ಮತಾಂತರಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ರಾಷ್ಟ್ರ ವಿರೋಧಿ ಚಟುವಟಿಕೆಗೆ ಬಳಸಿರುವುದು ಅನೇಕ ಪ್ರಕರಣಗಳಲ್ಲಿ ಬೆಳಕಿಗೆ ಬಂದಿದೆ.


ಈ ಪ್ರಕರಣದಲ್ಲಿಯೂ ಇದೇ ರೀತಿಯ ಸಂಚು, ರಾಷ್ಟ್ರ ವಿರೋಧಿ ಸಂಘಟನೆಯ ಕೈವಾಡ ಇರುವ ಬಗ್ಗೆ ಅನುಮಾನವಿದೆ. ಆದ್ದರಿಂದ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ)ಕ್ಕೆ ವಹಿಸಲು
ಕೇಂದ್ರ ಗೃಹ ಸಚಿವರಿಗೆ ಒತ್ತಡ ಹಾಕುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.


ಈ ಸಂದರ್ಭದಲ್ಲಿ ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ನಗರ ಮಾತೃಶಕ್ತಿ ಪ್ರಮುಖ್ ಗೀತಾ ರವಿ ಶೇಟ್ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article