-->
ಮಗುವಿನ ವ್ಯಕ್ತಿತ್ವ ರೂಪಿಸುವ ಶಿಕ್ಷಕ ವೃತ್ತಿ ಪವಿತ್ರ

ಮಗುವಿನ ವ್ಯಕ್ತಿತ್ವ ರೂಪಿಸುವ ಶಿಕ್ಷಕ ವೃತ್ತಿ ಪವಿತ್ರ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಮಗುವಿನ ವ್ಯಕ್ತಿತ್ವ ರೂಪಿಸುವ ಶಿಕ್ಷಕ ವೃತ್ತಿ ಪವಿತ್ರವಾದುದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಉಡುಪಿ ವಲಯ ಮತ್ತು ಅಂಬಲಪಾಡಿ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್  ಸಹಯೋಗದಲ್ಲಿ ಗುರುವಾರ ಇಲ್ಲಿನ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಡಾ. ಎಸ್ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸದಾ ಸ್ಮರಣೀಯರು
ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಶಿಕ್ಷಕರ ದಿನಾಚರಣೆಯಂದು ಮಾತ್ರವಲ್ಲದೇ ಜೀವನದುದ್ದಕ್ಕೂ ನೆನೆಯುವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದರು.
ಯುವ ಜನತೆ ಅನೇಕ ಕಾರಣಗಳಿಂದ ವಿವಿಧ ದುಷ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಬಾಲ್ಯದಿಂದಲೇ ಅವರಿಗೆ ಜೀವನ ನಿರ್ವಹಣೆಯ ಆದರ್ಶವನ್ನು ಮನದಟ್ಟುಗೊಳಿಸಿ ಮಗುವಿನ ವ್ಯಕ್ತಿತ್ವದ ಜೊತೆಗೆ ದೇಶದ ಉತ್ತಮ ಪ್ರಜೆಯನ್ನಾಗಿಸುವ ಹೊಣೆಗಾರಿಕೆ ಶಿಕ್ಷಕರಿಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದ್ದು, ಕಳೆದ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 94ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಜಿಲ್ಲೆಯ ಪ್ರತಿಯೊಬ್ಬರಿಗೂ ಹೆಗ್ಗಳಿಕೆಯ ಸಂಗತಿ. ಮುಂದಿನ ಬಾರಿ ಪ್ರತಿಶತ ನೂರರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದರು.
ಗೌರವಯುತ ಸ್ಥಾನ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಮತ್ತು ಶಿಕ್ಷಕರಿಗೆ ಉತ್ತಮ ಗೌರವ ಇದೆ. ವಿದ್ಯಾರ್ಥಿಗಳ ಏಳಿಗೆಯಲ್ಲಿ ತಮ್ಮ ಯಶಸ್ಸನ್ನು ಕಂಡುಕೊಳ್ಳುವ ಶಿಕ್ಷಕರು ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲುತ್ತಾರೆ ಎಂದರು.
ಅಂತರಂಗ ಬೆಳೆಸುವ ವ್ಯವಸ್ಥೆ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಅಂತರಂಗ ಬೆಳೆಸುವ ವ್ಯವಸ್ಥೆಯೇ ಶಿಕ್ಷಣ. ಅಂಥ ಶಿಕ್ಷಣ ನೀಡುವ ಗುರುಗಳನ್ನು ಗೌರವದಿಂದ ಕಾಣಬೇಕಾದುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಜೀವನ ಮೌಲ್ಯದ ಅರಿವು
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಗುವಿನ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದುದು. ಶಿಕ್ಷಕರು ತಾಳ್ಮೆಯಿಂದ ಪಾಠ, ಪಾಠೇತರ ಚಟುವಟಿಕೆಗಳ ಜೊತೆಗೆ ಬದುಕಿನ ಮೌಲ್ಯಗಳನ್ನು ನೀಡುತ್ತಾರೆ ಎಂದರು.
ಶಿಕ್ಷಣದಿಂದ ಪ್ರಗತಿ
ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು. ಶಿಕ್ಷಕರು ಉತ್ತಮ ಶಿಕ್ಷಣ ನೀಡಬೇಕು ಎಂದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ ಅಭ್ಯಾಗತರಾಗಿದ್ದರು.


ಶಿಕ್ಷಕರ ಪಾತ್ರ ಗಮನೀಯ
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶಪಾಲ್ ಎ. ಸುವರ್ಣ, ಬಾಲ್ಯದಲ್ಲಿಯೇ ಗುಣಮಟ್ಟದ ಶಿಸ್ತುಬದ್ದ ಶಿಕ್ಷಣವನ್ನು ಶಿಕ್ಷಕರು ನೀಡುತ್ತಾ ಬರುತ್ತಿದ್ದಾರೆ. ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಉತ್ತಮ ಸಾಧನೆಗೈದಿದ್ದು, ಅದಕ್ಕೆ ಶಿಕ್ಷಕರೂ ಕಾರಣ.


ಜಿಲ್ಲೆಯನ್ನು ಬುದ್ದಿವಂತರ ನಾಡು ಎಂದೇ ಗುರುತಿಸಿದ್ದು ಮುಂದಿನ ದಿನಗಳಲ್ಲಿ ಈ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸುವುದು ಅತ್ಯಗತ್ಯ ಎಂದರು.


ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರು ಹಾಗೂ ಉಡುಪಿ ವಲಯದ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.


ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಸ್ವಾಗತಿಸಿದರು. ನಾಗರಾಜ್ ಮತ್ತು ಜ್ಯೋತಿ ನಿರೂಪಿಸಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಂದಿಸಿದರು.

Ads on article

Advertise in articles 1

advertising articles 2

Advertise under the article