ಜೀವನ ಶೈಲಿ ಸುಧಾರಣೆಯಿಂದ ಉತ್ತಮ ಆರೋಗ್ಯ
Saturday, February 22, 2025
ಲೋಕಬಂಧು ನ್ಯೂಸ್
ಉಡುಪಿ, ಫೆ.21: ಆಧುನಿಕ ಯುಗದಲ್ಲಿ ಮನುಷ್ಯ ಒತ್ತಡದ ನಡುವೆ ತಮ್ಮ ದೈನಂದಿನ ಕಾರ್ಯ ನಿರ್ವಹಿಸುತ್ತಾನೆ. ಅದರಿಂದ ಹೊರಬರಲು ಜೀವನ ಶೈಲಿಯಲ್ಲಿ ಬದಲಾವಣೆ ಕಂಡುಕೊಂಡರೆ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಸಿ.ಎಸ್.ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದರು.ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಭಾರತೀಯ ರೆಡ್'ಕ್ರಾಸ್ ಸಂಸ್ಥೆ ರಾಜ್ಯ ಮತ್ತು ಉಡುಪಿ ಜಿಲ್ಲಾ ಶಾಖೆ, ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು, ಸಿ.ಎಸ್.ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಲಯನ್ಸ್ ಕ್ಲಬ್, ಉಡುಪಿ ಮಿಡ್'ಟೌನ್ ಹಾಗೂ ಹಿರಿಯ ನಾಗರಿಕರ ಸಂಘ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಮತ್ತು ಆಯ್ದ ಬಡ ಫಲಾನುಭವಿಗಳಿಗೆ ಉಚಿತ ಶ್ರವಣ ಸಾಧನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಆಧುನಿಕ ಜೀವನ ಶೈಲಿಗೆ ಮಾರುಹೋಗಿ ಪೌಷ್ಠಿಕ ಆಹಾರ ಬಿಟ್ಟು ಇತರ ಆಹಾರ ಸೇವನೆ ಹಾಗೂ ಒತ್ತಡದ ಕೆಲಸದಿಂದ ರಕ್ತದೊತ್ತಡ, ಮಧುಮೇಹ ಮತ್ತಿತರ ಕಾಯಿಲೆಗಳಿಗೆ ತುತ್ತಾಗುತ್ತಾನೆ. ಜನಸಾಮಾನ್ಯರು ಪೌಷ್ಠಿಕ ಆಹಾರ ಸೇವನೆ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್ ಸೇರಿದಂತೆ ಮತ್ತಿತರ ದೈಹಿಕ ಆರೋಗ್ಯ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು ಎಂದರು.
ಈ ಹಿಂದೆ ಸಮುದಾಯದ ರೋಗಗಳು ಹೆಚ್ಚಾಗಿ ಕಂಡುಬರುತ್ತಿದ್ದರೆ, ಪ್ರಸಕ್ತ ದಿನಗಳಲ್ಲಿ ವೈಯಕ್ತಿಕ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಶೇ.4ರಷ್ಟು ಜನರಿಗೆ ರಕ್ತದೊತ್ತಡ, ಶೇ.5ರಷ್ಟು ಜನರಿಗೆ ಮಧುಮೇಹ ಕಾಯಿಲೆ ಕಂಡುಬರುತ್ತಿವೆ. ಕಳೆದ ಎರಡು ಮೂರು ವರ್ಷಗಳಿಂದ ಯುವಜನರು ಹೃದಯಾಘಾತದಿಂದ ಮರಣ ಹೊಂದುತ್ತಿರುವುದು ಕಂಡುಬರುತ್ತಿದೆ ಎಂದರು.
ಜನಸಾಮಾನ್ಯರಿಗೆ ಹೃದಯಾಘಾತವಾದಾಗ ಆ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸಿ.ಪಿ.ಆರ್ ಬಗ್ಗೆ ಅರಿವು ಮೂಡಿಸುವುದು ಹೆಚ್ಚು ಅವಶ್ಯವಿದೆ ಎಂದ ಅವರು, ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ, ಸೂಕ್ತ ಚಿಕಿತ್ಸೆ ಪಡೆದಲ್ಲಿ ರೋಗದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.
ಕ್ಯಾನ್ಸರ್ ತಜ್ಞೆ ಡಾ. ವಿನುತಾ ಮಾತನಾಡಿ, ಜನಸಾಮಾನ್ಯರಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಹೆಚ್ಚು ಕಂಡುಬರುತ್ತಿವೆ. ಕ್ಯಾನ್ಸರ್ಗೆ ಚಿಕಿತ್ಸೆ ಇದೆ. ಮನುಷ್ಯನ ದೇಹದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಕೋಶ ಬೆಳವಣಿ ಇತ್ಯಾದಿಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಇದು ದೇಹದ ಇತರ ಭಾಗಗಳಿಗೆ ಹರಡಿದಾಗ ಚಿಕಿತ್ಸೆ ನೀಡಲು ಕಷ್ಟಸಾಧ್ಯ ಎಂದರು.
ಕ್ಯಾನ್ಸರ್'ನಲ್ಲಿ ಸ್ತನ ಕ್ಯಾನ್ಸರ್, ಬ್ಲಡ್ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಲಂಗ್ಸ್ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿವೆ. ತಂಬಾಕು ಉತ್ಪನ್ನಗಳು, ಗುಟ್ಕಾ, ಮದ್ಯಪಾನ, ಅಪೌಷ್ಠಿಕ ಆಹಾರಗಳ ಸೇವನೆ, ದೇಹದ ಜಡತ್ವ ಸೇರಿದಂತೆ ವಂಶವಾಹಿನಿಯಾಗಿ ಈ ರೋಗಗಳು ಬರುತ್ತವೆ. ಮನುಷ್ಯನು ಆರೋಗ್ಯಕರ ಜೀವನ ನಡೆಸಲು ಒತ್ತುನೀಡಬೇಕು ಎಂದರು.
ರೆಡ್ ಕ್ರಾಸ್ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿ, ನಮ್ಮ ಆರೋಗ್ಯ ಸಮಸ್ಯೆಗೆ ನಾವೇ ಕಾರಣ. ಆರೋಗ್ಯ ಉತ್ತಮವಾಗಿದ್ದಲ್ಲಿ ಮಾತ್ರ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಲೂಯಿಸ್ ಲೋಬೊ, ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಬದಲಾಗುತ್ತಿದ್ದು, ನಮ್ಮ ದೇಹಕ್ಕೆ ಉಪಯುಕ್ತ ಆಹಾರ ಸೇವಿಸುತ್ತಾ ಉತ್ತಮ ಆರೋಗ್ಯ ಹೊಂದೋಣ ಎಂದರು.
ಇದೇ ಸಂದರ್ಭದಲ್ಲಿ ಆಯ್ದ 25 ಫಲಾನುಭವಿಗಳಿಗೆ ಶ್ರವಣ ಸಾಧನ ವಿತರಿಸಲಾಯಿತು.
ಹಿರಿಯ ನಾಗರಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ನಾಗರಾಜ್ ರಾವ್, ಮಿಷನ್ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ದೀಪಾ ವೈ. ರಾವ್, ಡಾ. ಪವಿತ್ರ ಹಾಗೂ ಡಾ. ಅಕ್ಷತಾ, ನೇತ್ರ ತಜ್ಞ ಡಾ. ಅಭಿನಯ್ ಅಶೋಕ್, ಕೀಲು ಮತ್ತು ಎಲುಬು ತಜ್ಞರಾದ ಡಾ. ಅರ್ಜುನ್ ಬಳ್ಳಾಲ್, ಸಾಮಾನ್ಯ ಆರೋಗ್ಯ ತಜ್ಞರಾದ ಡಾ. ಧನಂಜಯ ಭಟ್ ಹಾಗೂ ಡಾ.ಗಣೇಶ್ ಕಾಮತ್ ಮತ್ತು ದಂತ ತಜ್ಞರಾದ ಡಾ. ನಾಗೇಶ್ ನಾಯಕ್ ಮತ್ತು ಡಾ. ಸಾರಿಕಾ ಮೊದಲಾದವರಿದ್ದರು.
ಭಾರತೀಯ ರೆಡ್'ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ನಿರೂಪಿಸಿದರು. ಖಜಾಂಜಿ ರಮಾದೇವಿ ವಂದಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಮತ್ತು ಸಾರ್ವಜನಿಕರಿಗೆ ಉಚಿತ ಸ್ತ್ರೀರೋಗ ಮ್ಯಾಮೊಗ್ರಾಫಿ ಪರೀಕ್ಷೆ, ಪ್ಯಾಪ್ ಸ್ಮೀಯರ್ ಪರೀಕ್ಷೆ (ಗರ್ಭಕೋಶ ಕಂಠ ಪರೀಕ್ಷೆ), ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ ತಪಾಸಣೆ, ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ, ಕೀಲು ಮತ್ತು ಎಲುಬು, ದಂತ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. 300ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.