ಬಸ್ ಸೇವೆ ಸ್ಥಗಿತ: ಲಭಿಸದ 'ಶಕ್ತಿ'
Saturday, February 22, 2025
ಲೋಕಬಂಧು ನ್ಯೂಸ್
ಉಡುಪಿ, ಫೆ.21: ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಉಡುಪಿ ತಾಲೂಕು ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ, ಸರ್ಕಾರಿ ಬಸ್ ಸೇವೆ ಸ್ಥಗಿತಗೊಂಡು ಜನರಿಗಾಗುತ್ತಿರುವ ಸಮಸ್ಯೆಗಳು ಪ್ರತಿಧ್ವನಿಸಿದವು.ಉಡುಪಿ– ಪಟ್ಲ, ಉಡುಪಿ ಪಡುಕೆರೆ, ಮಲ್ಲಾರು –ಬೆಳಪು, ಉದ್ಯಾವರ –ಪಿತ್ರೋಡಿ ಮಾರ್ಗಗಳಲ್ಲಿ ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ಸರ್ಕಾರಿ ಬಸ್ ಸೇವೆ ಇದುವರೆಗೂ ಪುನರಾರಂಭಗೊಳ್ಳದೆ ಈ ಭಾಗದ ಮಹಿಳೆಯರು ಸರ್ಕಾರದ ‘ಶಕ್ತಿ’ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಸಭೆಗೆ ತಿಳಿಸಿದರು.
ಈ ಮಾರ್ಗಗಳಲ್ಲಿ ಶೀಘ್ರ ಸರ್ಕಾರಿ ಬಸ್ ಸೇವೆ ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಚಾಲಕ ಮತ್ತು ಕಂಡೆಕ್ಟರ್ಗಳ ಕೊರತೆ ಇರುವುದರಿಂದ ಈ ಮಾರ್ಗಗಳಲ್ಲಿ ಬಸ್ ಸೇವೆ ಪುನರಾರಂಭವಾಗಿಲ್ಲ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಯಾವ ಮಾರ್ಗಗಳಲ್ಲಿ ಸರ್ಕಾರಿ ಬಸ್ಗಳ ಸೇವೆ ಸ್ಥಗಿತಗೊಂಡಿದೆ ಎಂಬುದನ್ನು ಪಟ್ಟಿ ಮಾಡಿ ಕೊಡಿ, ಅದನ್ನು ಜಿಲ್ಲಾ ಸಮಿತಿಯ ಮೂಲಕ ರಾಜ್ಯ ಸಮಿತಿಗೆ ಕಳುಹಿಸಿಕೊಡಲಾಗುವುದು ಮತ್ತು ಸಮಸ್ಯೆ ಪರಿಹರಿಸಲು ಮನವಿ ಮಾಡಲಾಗುವುದು ಎಂದರು.
ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರಕುವಂತೆ ಮಾಡಲು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಸಮಿತಿಯ ಸದಸ್ಯರು ಸೇರಿ ಗ್ರಾಮ ಪಂಚಾಯತ್ ಹಾಗೂ ನಗರಸಭೆ ಮಟ್ಟದಲ್ಲಿ ಜನರಿಗೆ ಮಾಹಿತಿ ನೀಡಬೇಕು ಎಂದೂ ಹೇಳಿದರು.
ಎಲ್ಲಾ ಸೊಸೈಟಿಗಳಲ್ಲೂ, ಮೆಸ್ಕಾಂ ಕಚೇರಿಗಳಲ್ಲೂ ಪಂಚ ಗ್ಯಾರಂಟಿಗಳ ಮಾಹಿತಿ ನೀಡುವ ಸ್ಟಿಕ್ಕರ್ಗಳನ್ನು ಅಂಟಿಸಬೇಕು ಎಂದೂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೆಸ್ಕಾಂನ ಎಟಿಪಿ (ಎನಿ ಟೈಮ್ ಪೇಮೆಂಟ್) ವ್ಯವಸ್ಥೆ ಸ್ಥಗಿತಗೊಂಡಿರುವುದರಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳನ್ನೂ ಸದಸ್ಯರು ಸಭೆಯ ಗಮನಕ್ಕೆ ತಂದರು.
ಅದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕಾಂಚನ್, ಎಟಿಪಿ ಸಮಸ್ಯೆ ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಉಡುಪಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ, ತಹಶೀಲ್ದಾರ್ ಗುರುರಾಜ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.