
ಮಕ್ಕಳಲ್ಲಿ ಕೃಷಿ ಆಸಕ್ತಿ ಮೂಡಿಸುವುದು ಅಗತ್ಯ
Saturday, February 22, 2025
ಲೋಕಬಂಧು ನ್ಯೂಸ್
ಉಡುಪಿ, ಫೆ.22: ಯುವಜನತೆ ಕೃಷಿಯಿಂದ ವಿಮುಖರಾಗುತ್ತಿರುವ ಈ ದಿನಗಳಲ್ಲಿ ಮಕ್ಕಳಲ್ಲಿ ಕೃಷಿ ಆಸಕ್ತಿ ಬೆಳೆಸುವುದು ಅಗತ್ಯ. ಶಿವಪಾಡಿ ವೈಭವ ಮೂಲಕ ಆರೋಗ್ಯ, ಕೃಷಿ, ಮನೋರಂಜನ ಮೇಳ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಧರ್ಮಸ್ಥಳ ಧಮಾರ್ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ವಠಾರದಲ್ಲಿ ಶಿವರಾತ್ರಿ ಅಂಗವಾಗಿ ದೇವಳದ ಅಭಿವೃದ್ಧಿ ಟ್ರಸ್ಟ್ ಹಾಗೂ ಶಿವಪಾಡಿ ವೈಭವ ಆಚರಣಾ ಸಮಿತಿ ವತಿಯಿಂದ ಫೆ.26ರ ವರೆಗೆ ಆಯೋಜಿಸಲಾಗಿರುವ ಯಕ್ಷಗಾನ, ಕೃಷಿ, ಆರೋಗ್ಯ, ಆಹಾರ ಮೇಳ ಸಂಯುಕ್ತ ಕಾರ್ಯಕ್ರಮ ಶಿವಪಾಡಿ ವೈಭವಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ತಿಂದಿರುವುದನ್ನು ಅರಗಿಸಿಕೊಳ್ಳಲು ಆರೋಗ್ಯ ಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯವಿದ್ದರೆ ಮಾತ್ರ ಸಾಧನೆ ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಮೇಳ ಪೂರಕವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್ ಬಲ್ಲಾಳ್, ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಶೇ.40ರಷ್ಟು ಮಂದಿ ಕೃಷಿಯನ್ನು ಅವಲಂಬಿಸಿದ್ದಾರೆ. ಯುವಜನತೆಯಲ್ಲಿ ಕೃಷಿ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಕೃಷಿ ಮೇಳ ಆಯೋಜಿಸಲಾಗಿದ್ದು, ಯುವಜನರು ಇದರ ಪ್ರಯೋಜನ ಪಡೆಯಬೇಕು ಎಂದರು.
ಧರ್ಮ, ಸಂಸ್ಕೃತಿ, ಬದುಕು ಕಟ್ಟಿಕೊಡುವ ಕೆಲಸ ಶಿವಪಾಡಿ ಉತ್ಸವದ ಮೂಲಕ ನಡೆಯುತ್ತಿದೆ. ಉಡುಪಿ ಮತ್ತು ದ.ಕ. ಜಿಲ್ಲೆ ಹೆಚ್ಚಿನ ಅಭಿವೃದ್ಧಿ ಕಾಣಲು ಸರ್ಕಾರ ಕಾರಣವಲ್ಲ. ನಮ್ಮ ಹಿರಿಯರು ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಿದ್ದರಿಂದ ದೇಶದಲ್ಲಿ ಅವಿಭಜಿತ ದ.ಕ. ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂದು ಅಭ್ಯಾಗತರಾಗಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ವಿದ್ವಾನ್ ರಾಮಚಂದ್ರ ಕುಂಜಿತ್ತಾಯ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ಉದ್ಯಮಿ ಉದಯ ಕುಮಾರ್ ಶೆಟ್ಟಿ ಮುನಿಯಾಲು, ದೇವಸ್ಥಾನದ ಶಾಶ್ವತ ಟ್ರಸ್ಟಿ ದಿನೇಶ್ ಸಾಮಂತ್, ಟ್ರಸ್ಟಿಗಳಾದ ಸತೀಶ್ ಪಾಟೀಲ್ ಶುಭಂಕರ್ ಸಾಮಂತ್, ಪ್ರಕಾಶ್ ಪ್ರಭು, ಅಶೋಕ್ ಸಾಮಂತ್, ಸಾಂಸ್ಕೃತಿಕ ಕಾರ್ಯದರ್ಶಿ ನಾಗರಾಜ್ ಕಾಮತ್, ಶಿವಪಾಡಿ ವೈಭವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ದೇವಳದ ಅಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಉಪಸ್ಥಿತರಿದ್ದರು.
ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ.ರಘುಪತಿ ಭಟ್ ಪ್ರಸ್ತಾವಿಕವಾಗಿ ಮಾತನಾಡಿದರು. ದೇವಳದ ಆಡಳಿತ ಮೊಕ್ತೇಸರ ಮಹೇಶ್ ಠಾಕೂರ್ ಸ್ವಾಗತಿಸಿದರು. ಪತ್ರಕರ್ತ ರಾಜೇಶ್ ಕೆ.ಸಿ. ಕಾರ್ಯಕ್ರಮ ನಿರೂಪಿಸಿದರು.