ಲೋಕಬಂಧು ನ್ಯೂಸ್
ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಆಗೌರವ ತೋರಿದ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ. ಖಾದರ್ ಮುಂದಿನ 6 ತಿಂಗಳ ವರೆಗೆ ಕಲಾಪದಿಂದ ಅಮಾನತು ಮಾಡಿದ್ದಾರೆ.ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ಲಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ ಬಸವರಾಜ ಮತ್ತಿಮೂಡ, ಎಸ್.ಆರ್. ವಿಶ್ವನಾಥ್ ಅವರನ್ನು ಮಾರ್ಷಲ್'ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರ ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈ ಡ್ರಾಮಾಕ್ಕೆ ಕಾರಣವಾಯಿತು.
ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಗಿದ್ದ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ಸ್ಪೀಕರ್ ಖಾದರ್, ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆ ಮುಂದುವರಿಸಿದ್ದರು.