
ಅಂಬೇಡ್ಕರ್ ವಿಚಾರಧಾರೆ ಇಂದಿನ ಅಗತ್ಯ
Wednesday, April 16, 2025
ಲೋಕಬಂಧು ನ್ಯೂಸ್
ಉಡುಪಿ: ಗ್ರಾಮ ಪಂಚಾಯತ್ ನಿಂದ ಸಂಸತ್ ವರೆಗಿನ ಚುನಾವಣೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಟ್ಟ ಧೀಮಂತ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಉದಾತ್ತ ವಿಚಾರಧಾರೆಗಳು ಹಾಗೂ ಜೀವನಾದರ್ಶಗಳ ಪಾಲನೆ ಇಂದಿನ ಅಗತ್ಯತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.
ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಡಾ.ಅಂಬೇಡ್ಕರ್ ಬಗ್ಗೆ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್, ಅಂಬೇಡ್ಕರ್ ಅವರನ್ನು ಹೇಗೆ ನಡೆಸಿಕೊಂಡಿದೆ ಹಾಗೂ ಚುನಾವಣೆಗೆ ಸ್ಪರ್ಧಿಸಿದಾಗ ಅವರನ್ನು ಯಾವ ರೀತಿಯಲ್ಲಿ ಸೋಲಿಸಲು ಕಾರಣವಾಗಿದೆ ಎಂಬುದು ಜಗಜ್ಜಾಹೀರಾಗಿದೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚತೀರ್ಥಗಳನ್ನಾಗಿ ಅಭಿವೃದ್ಧಿಪಡಿಸುವ ಮೂಲಕ ಅಂಬೇಡ್ಕರ್ ಅವರಿಗೆ ನೈಜ ಗೌರವ ಸಲ್ಲಿಸಿದ್ದಾರೆ ಎಂದರು.
ಯುವ ಚಿಂತಕ ಸಂತೋಷ್ ನಂಬಿಯಾರ್ ಪಡುಬಿದ್ರಿ ಅಂಬೇಡ್ಕರ್ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ ಹಾಗೂ ಜೀವನಾದರ್ಶಗಳ ಕುರಿತು ಉಪನ್ಯಾಸ ನೀಡಿದರು.
ಶಾಸಕ ಯಶಪಾಲ್ ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮತ್ತು ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಎಸ್.ಸಿ. ಮೋರ್ಚಾ ಪ್ರಮುಖರಾದ ಹಿರಿಯಣ್ಣ, ಸದಾನಂದ ಕೈಪುಂಜಾಲು, ಅಜಿತ್ ಕುಮಾರ್, ಪಾರ್ಥಸಾರಥಿ, ಅಭಿಜಿತ್ ಮೊದಲಾದವರಿದ್ದರು.
ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ನಿರೂಪಿಸಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ ವಂದಿಸಿದರು.