-->
ಏಕವಿನ್ಯಾಸ ನಕ್ಷೆ ಸಮಸ್ಯೆ ಶೀಘ್ರ ಬಗೆಹರಿಸಲು 15 ದಿನ ಗಡುವು

ಏಕವಿನ್ಯಾಸ ನಕ್ಷೆ ಸಮಸ್ಯೆ ಶೀಘ್ರ ಬಗೆಹರಿಸಲು 15 ದಿನ ಗಡುವು

ಲೋಕಬಂಧು ನ್ಯೂಸ್, ಉಡುಪಿ
ಜನಸಾಮಾನ್ಯರಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕವಿನ್ಯಾಸ ನಕ್ಷೆ ಸಮಸ್ಯೆಗಳ ಬಗ್ಗೆ ದಿನೇ ದಿನೇ ದೂರುಗಳು ಕೇಳಿ ಬರುತ್ತಿದ್ದು, ಅದರಿಂದಾಗಿ ಗೃಹ ನಿರ್ಮಾಣ ಮತ್ತು ಕಟ್ಟಡ ಕಟ್ಟಲು ತೊಂದರೆಯಾಗುತ್ತಿದೆ. ಅದನ್ನು ಹದಿನೈದು ದಿನಗಳೊಳಗಾಗಿ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕನಿವೇಶನ ನಕ್ಷೆ ಹಾಗೂ ನಮೂನೆ 9/11ರಲ್ಲಿ ಎದುರಾಗುತ್ತಿರುವ ಸಮಸ್ಯೆ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಗ್ರಾಮ ಪಂಚಾಯತ್ ನಲ್ಲಿ ವಿತರಿಸುತ್ತಿದ್ದ 9/11 ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಿದ ನಂತರ ಕಾರಣವಿಲ್ಲದೆ ವಿಳಂಬ ನೀತಿ ಅನುಸರಿಸುತ್ತಿದ್ದು ಅರ್ಜಿದಾರರು ಬೇಸತ್ತಿದ್ದಾರೆ. ರಸ್ತೆ ಅಂಚಿನ 6 ಮೀ. ಬಿಟ್ಟು ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವಂತೆ ಸರ್ಕಾರದ ಸುತ್ತೋಲೆ ಇದ್ದರೂ ಪ್ರಾಧಿಕಾರದ ನಿರ್ಲಕ್ಷ್ಯತನದಿಂದಾಗಿ ಸಾವಿರಾರು ಕಡತಗಳು ವಿಲೇವಾರಿಯಾಗದೇ ಬಾಕಿ ಇವೆ ಎಂದರು.


ಸುತ್ತೋಲೆಯಲ್ಲಿರುವಂತೆ ನಗರ ಸ್ಥಳೀಯಾಡಳಿತ ಸಂಸ್ಥೆಗಳು ಇರುವ ರಸ್ತೆಗಳನ್ನು ಅಗಲಗೊಳ್ಳಲು ಸಾಧ್ಯವಿಲ್ಲವೆಂದು ಪ್ರಸ್ತಾವನೆ ಕಳುಹಿಸಿದರೆ ಕೇವಲ 3.5 ಮೀ.ಗೆ ಅನುಮತಿ ನೀಡುವ ಸರ್ಕಾರದ ಆದೇಶ ಪಾಲಿಸಬೇಕು. ಪ್ರಾಧಿಕಾರದಲ್ಲಿ ಮಧ್ಯವರ್ತಿಗಳ ಹಾವಳಿ ನಿಲ್ಲಿಸಿ ಜನಸಾಮಾನ್ಯರಿಗೆ ಆಗುವ ತೊಂದರೆ ನಿವಾರಿಸಬೇಕೆಂದು ಸೂಚಿಸಿದರು.


ಶಾಸಕರಾದ ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ ತಕ್ಷಣ ಸಮಸ್ಯೆ ಸರಿಪಡಿಸಲು ಕ್ರಮ ವಹಿಸುವಂತೆ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಮಾತನಾಡಿ, ದೂರದೂರಿನಿಂದ ಬರುವ ಅರ್ಜಿದಾರರಿಗೆ ತೊಂದರೆಯಾಗದಂತೆ ಮತ್ತು ಗ್ರಾಮ ಪಂಚಾಯತ್ ಶಿಫಾರಸುಗಳಿರುವ ಅರ್ಜಿಗಳನ್ನು ವಿಳಂಬವಾಗದೇ ಅನುಮೋದನೆ ನೀಡಲು ಪ್ರಾಧಿಕಾರಕ್ಕೆ ಸೂಚಿಸಿದರು.


ಸುದೀರ್ಘ ಚರ್ಚೆ ನಂತರ ರಸ್ತೆ ಅಂಚಿನ 6 ಮೀ. ನಿಗದಿಗೊಳಿಸಿ, ಲೋಕೋಪಯೋಗಿ ಇಲಾಖೆ ಅನುಮತಿ ಪಡೆದು ಕಡತಗಳನ್ನು 15 ದಿನಗಳೊಳಗಾಗಿ ವಿಲೇವಾರಿ ಮಾಡುವುದಾಗಿ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ತಿಳಿಸಿದರು.


ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಪೌರಾಯುಕ್ತ ಮಹೇಶ್, ಕುಂದಾಪುರ ಹಾಗೂ ಕಾಪು ನಗರ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನವೀನ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಕಿರಣ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಜ್ಞಾನಮೂರ್ತಿ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article