ಗಾಂಧಿ ಆಸ್ಪತ್ರೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ
Sunday, May 4, 2025
ಲೋಕಬಂಧು ನ್ಯೂಸ್
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30 ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ರಕ್ತದಾನ ಶಿಬಿರ ಉದ್ಘಾಟಿಸಿ, ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ಹಂಚುವ ಕೆಲಸವನ್ನು ಗಾಂಧಿ ಆಸ್ಪತ್ರೆ ಮಾಡುತ್ತಿದೆ. ನಗರಸಭೆ ಜೊತೆ ಗಾಂಧಿ ಆಸ್ಪತ್ರೆ ಕೈಜೋಡಿಸಿದ್ದು ಎಂ.ಹರಿಶ್ಚಂದ್ರ ಅವರ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದರು.
ನಗರಸಭೆ ಪೌರಾಯುಕ್ತ ಡಾ. ಉದಯ ಕುಮಾರ್ ಶೆಟ್ಟಿ ಮಾತನಾಡಿ ಆರೋಗ್ಯ, ಶಿಕ್ಷಣ, ಆದಾಯದ ಆಧಾರದಲ್ಲಿ ಮಾನವ ಅಭಿವೃದ್ಧಿ ಅಳತೆಗೋಲಾಗಿದ್ದು ಮಡಾಮಕ್ಕಿಯಂಥ ಕುಗ್ರಾಮದಿಂದ ಬಂದ ಎಂ.ಹರಿಶ್ಚಂದ್ರ ಸಾಧನೆ ಅನ್ಯರಿಗೆ ಮಾದರಿ ಎಂದರು.
ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಶುಭ ಹಾರೈಸಿದರು.
ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ ವಿವಿಧ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು.
ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ ಎಜಿಎಂ ವಾದಿರಾಜ ಭಟ್, ಲಕ್ಷ್ಮೀ ಹರಿಶ್ಚಂದ್ರ, ಡಾ. ಪಂಚಮಿ, ಡಾ. ವಿದ್ಯಾ ವಿ. ತಂತ್ರಿ ಉಪಸ್ಥಿತರಿದ್ದರು.
ವಿಜಯಲಕ್ಷ್ಮಿ ಪ್ರಾರ್ಥಿಸಿದರು. ಗಾಂಧಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಪ್ರಾಸ್ತಾವಿಕ ಮಾತುಗಳನಾಡಿ, ಕಳೆದ 30 ವರ್ಷದ ಹಿಂದೆ ಗೆಳೆಯನ ಜೊತೆ 25 ಬೆಡ್ ಗಳಿಂದ ಎಂ. ಹರಿಶ್ಚಂದ್ರ ಆರಂಭಿಸಿದ ಆಸ್ಪತ್ರೆ 2002ರಲ್ಲಿ ಸ್ವಂತ ಕಟ್ಟಡ ಹೊಂದಿ, ಐದು ಡಯಾಲಿಸಿಸ್ ಯಂತ್ರ ಅಳವಡಿಸಿದೆ. 25 ವರ್ಷಗಳಿಂದ ಪಂಚಮಿ ಟ್ರಸ್ಟ್ ಮೂಲಕ ಸಮಾಜಮುಖಿ ಸೇವೆ, ಸಿಟಿ ಬಸ್ ನಿಲ್ದಾಣದಿಂದ ಕಲ್ಸಂಕ ತನಕದ ಮುಖ್ಯರಸ್ತೆಯನ್ನು ಹತ್ತು ವರ್ಷದಿಂದ ಪ್ರತೀ ಭಾನುವಾರ ಸ್ವಚ್ಚತೆ ಕಾರ್ಯ, ಗಾರ್ಡನ್ ನಿರ್ವಹಣೆ ಮಾಡಲಾಗುತ್ತಿದೆ ಎಂದರು.
ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಸುಮಾ ವಂದಿಸಿದರು.