-->
ಮಲ್ಪೆ ಬಂದರು ನಿರ್ವಹಣೆ ಗುತ್ತಿಗೆ ವಿಸ್ತರಣೆ ಆದೇಶ ರದ್ದುಪಡಿಸಿ

ಮಲ್ಪೆ ಬಂದರು ನಿರ್ವಹಣೆ ಗುತ್ತಿಗೆ ವಿಸ್ತರಣೆ ಆದೇಶ ರದ್ದುಪಡಿಸಿ

ಲೋಕಬಂಧು ನ್ಯೂಸ್
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರು ನಿರ್ವಹಣಾ ಗುತ್ತಿಗೆಯನ್ನು ಖಾಸಗಿ ವ್ಯಕ್ತಿಗೆ ನಿಯಮಬಾಹಿರವಾಗಿ ಮುಂದಿನ ಎರಡು ವರ್ಷ ಅವಧಿಗೆ ವಿಸ್ತರಣೆ ಮಾಡಿರುವ ಬಗ್ಗೆ ಮಲ್ಪೆ ಮೀನುಗಾರರ ಸಂಘ ಹಾಗೂ ಮೀನುಗಾರರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಮೀನುಗಾರ ಮುಖಂಡರು ಗುರುವಾರ ಸಭೆ ನಡೆಸಿದರು.
ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮಾತನಾಡಿ, ಈ ಹಿಂದೆ ಮಲ್ಪೆ ಬಂದರು ನಿರ್ವಹಣೆಯ ಗುತ್ತಿಗೆ ಪಡೆದ ಖಾಸಗಿ ವ್ಯಕ್ತಿ ಬಂದರಿನ ಸಮರ್ಪಕ ನಿರ್ವಹಣೆಯಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಟೆಂಡರ್ ನಿಯಮಾವಳಿ ಪಾಲಿಸದೆ ಸಿಸಿ ಟಿವಿ, ಭದ್ರತಾ ಸಿಬ್ಬಂದಿ ನಿಯೋಜನೆ ಹಾಗೂ ಬಂದರು ಸ್ವಚ್ಛತೆ ಬಗ್ಗೆ ಯಾವುದೇ ಮುತುವರ್ಜಿ ವಹಿಸದೇ ಇರುವ ಬಗ್ಗೆ ಹಲವಾರು ಬಾರಿ ಮೀನುಗಾರಿಕೆ ಇಲಾಖೆ, ಜಿಲ್ಲಾಧಿಕಾರಿ ಹಾಗೂ ಮೀನುಗಾರಿಕೆ ಸಚಿವರಿಗೆ ದೂರು ನೀಡಲಾಗಿದೆ.


ಮಲ್ಪೆ ಬಂದರಿನಲ್ಲಿ ಸೂಕ್ತ ಭದ್ರತಾ ಸಿಬ್ಬಂದಿ ಹಾಗೂ ಸಿಸಿ ಟಿವಿ ಕೊರತೆಯ ಪರಿಣಾಮ ನಿರಂತರವಾಗಿ ಮೀನು ಹಾಗೂ ಮೀನುಗಾರಿಕೆ ಸಲಕರಣೆಗಳ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಕೂಡ ಮಲ್ಪೆ ಮೀನುಗಾರಿಕಾ ಬಂದರಿಗೆ ಕಪ್ಪುಚುಕ್ಕೆಯಾಗಿದೆ. ಇಂಥ ಗಂಭೀರ ಸಮಸ್ಯೆಗಳನ್ನು ಪರಿಗಣಿಸದೆ ನಮ್ಮ ಮನವಿಗೆ ಸ್ಪಂದಿಸದೆ ಈಗ ಏಕಪಕ್ಷೀಯವಾಗಿ ಅದೇ ವ್ಯಕ್ತಿಗೆ ನಿಯಮಬಾಹಿರವಾಗಿ ಮೀನುಗಾರಿಕೆ ಇಲಾಖೆ ಗುತ್ತಿಗೆ ವಿಸ್ತರಿಸಿ ಮೀನುಗಾರರಿಗೆ ಮೋಸ ಮಾಡಲಾಗಿದೆ.


ಈಗಾಗಲೇ ಗುತ್ತಿಗೆ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಕರೆಯುವಂತೆ ಮೀನುಗಾರಿಕೆ ಇಲಾಖೆಗೆ ಹಲವು ಬಾರಿ ಮನವಿ ಮಾಡಲಾಗಿದೆ. ಸ್ವತಃ ಜಿಲ್ಲಾಧಿಕಾರಿ ಮಲ್ಪೆ ಬಂದರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬಂದರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ ವ್ಯಕ್ತಿಯ ಗುತ್ತಿಗೆಯನ್ನು ರದ್ದು ಮಾಡಿ ಕಪ್ಪುಪಟ್ಟಿಗೆ ಸೇರಿಸಲು ಸೂಚನೆ ನೀಡಿದ ನಂತರವೂ ಮೀನುಗಾರಿಕೆ ಇಲಾಖೆ ಗುತ್ತಿಗೆ ಅವಧಿ ವಿಸ್ತರಿಸಿರುವುದು ಅಕ್ಷಮ್ಯ ಎಂದರು.


ಮೇ 10ರ ಬಳಿಕ ಮಲ್ಪೆ ಮೀನುಗಾರ ಸಂಘದ ವತಿಯಿಂದ ಯಾವುದೇ ನಿರ್ವಹಣಾ ವೆಚ್ಚ ಪಾವತಿಸದಿರುವ ಬಗ್ಗೆ ಈಗಾಗಲೇ ತೀರ್ಮಾನ ಕೈಗೊಂಡಿದ್ದು, ಮೀನುಗಾರಿಕೆ ಇಲಾಖೆ ತಕ್ಷಣ ಎರಡು ವರ್ಷಗಳಿಗೆ ಗುತ್ತಿಗೆ ಅವಧಿಯನ್ನು ವಿಸ್ತರಿಸಿರುವ ಆದೇಶವನ್ನು ರದ್ದುಮಾಡಿ, ಹೊಸತಾಗಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಮೀನುಗಾರರ ಪರವಾಗಿ ಆಗ್ರಹಿಸಿದರು.


ಶಾಸಕ ಯಶಪಾಲ್ ಸುವರ್ಣ‌ ಮಾತನಾಡಿ, ಈಗಾಗಲೇ ಮಲ್ಪೆ ಮೀನುಗಾರಿಕೆ ಬಂದರಿನ ಅವ್ಯವಸ್ಥೆ ಬಗ್ಗೆ ನಿರಂತರವಾಗಿ ಮಾಧ್ಯಮಗಳಲ್ಲಿ ವರದಿಗಳು ಬರುತ್ತಿದ್ದರೂ ಮೀನುಗಾರಿಕೆ ಇಲಾಖೆ ನಿಯಮ ಬಾಹಿರವಾಗಿ ಗುತ್ತಿಗೆ ಅವಧಿ ವಿಸ್ತರಿಸುವ ಮೂಲಕ ಮೀನುಗಾರರಿಗೆ ಅನ್ಯಾಯವೆಸಗಿದೆ. ಮೀನುಗಾರಿಕೆ ಇಲಾಖೆ ನಿರ್ದೇಶಕರು  ತಕ್ಷಣ ಮಲ್ಪೆ ಬಂದರಿಗೆ ಆಗಮಿಸಿ ಮೀನುಗಾರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಗುತ್ತಿಗೆ ಅವಧಿ ವಿಸ್ತರಣೆ ಮಾಡಿದ ಆದೇಶ ಹಿಂಪಡೆದು, ಹೊಸ ಟೆಂಡರ್ ಪ್ರಕ್ರಿಯೆ ನಡೆಸಬೇಕು ಹಾಗೂ ಇತ್ತೀಚಿನ ದಿನಗಳಲ್ಲಿ ಮಲ್ಪೆ ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಮೀನುಗಾರಿಕೆ ಚಟುವಟಿಕೆಗೆ ಸಂಬಂಧಿಸಿದ ನಿವೇಶನಗಳನ್ನು ಖಾಸಗಿ ವ್ಯಕ್ತಿಗಳಿಗೆ ಲೀಸ್ ನೀಡಲು ಮುಂದಾಗಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಇಲಾಖೆ ತಕ್ಷಣ ಈ ಪ್ರಕ್ರಿಯೆಯನ್ನು ಕೈ ಬಿಡಬೇಕು ಹಾಗೂ ಮುಂದಿನ ದಿನಗಳಲ್ಲಿ  ಮಲ್ಪೆ ಬಂದರು ಅಭಿವೃದ್ಧಿ, ನಿರ್ವಹಣೆ ಹಾಗೂ ನಿವೇಶನ ಹಂಚಿಕೆಯಂಥ ಪ್ರಕ್ರಿಯೆ ಸಂದರ್ಭದಲ್ಲಿ ಸ್ಥಳೀಯ ಶಾಸಕರು ಹಾಗೂ ಮಲ್ಪೆ ಮೀನುಗಾರ ಸಂಘದ ಪ್ರತಿನಿಧಿಗಳೊಂದಿಗೆ ಸಾಧಕ ಬಾಧಕಗಳನ್ನು ಚರ್ಚಿಸಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸಭೆಯಲ್ಲಿ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿವೇಕ್, ಸಹಾಯಕ ನಿರ್ದೇಶಕಿ ಸವಿತಾ ಖಾದ್ರಿ, ಮಲ್ಪೆ ಮೀನುಗಾರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article