
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
Wednesday, May 28, 2025
ಲೋಕಬಂಧು ನ್ಯೂಸ್, ಉಡುಪಿ
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕರೆಯಂತೆ ಬುಧವಾರ ಉಡುಪಿ ನಗರಸಭೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ತಮ್ಮ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದಿಡಲಾಗಿದ್ದು, ಸೂಕ್ತ ಸ್ಪಂದನೆ ಲಭಿಸದ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದು ಅನಿವಾರ್ಯವಾಯಿತು ಎಂದು ಪ್ರತಿಭಟನಾ ನಿರತರು ಹೇಳಿದರು. ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುವ ಖಾಯಂ ಹಾಗೂ ಹೊರಗುತ್ತಿಗೆ ನೌಕರರು ಭಾಗವಹಿಸಿದ್ದರು.
ಪ್ರತಿಭಟನಾ ಸ್ಥಳಕ್ಕೆ ಶಾಸಕ ಯಶಪಾಲ್ ಸುವರ್ಣ ಆಗಮಿಸಿ, ಮುಷ್ಕಕ್ಕೆ ಬೆಂಬಲ ಸೂಚಿಸಿದರು. ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಜೆ. ಕಲ್ಮಾಡಿ, ನಗರಸಭೆಯ ಸದಸ್ಯರಾದ ಟಿ.ಜಿ ಹೆಗ್ಡೆ, ಗಿರೀಶ್ ಅಂಚನ್, ರಾಜು ಮತ್ತು ಬಾಲಕೃಷ್ಣ ಶೆಟ್ಟಿ ಮುಷ್ಕರದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮುಷ್ಕರವನ್ನು ಬೆಂಬಲಿಸಿ ನೌಕರರ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ ಆಗ್ರಹಿಸಿದರು.
ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಸದಸ್ಯೆ ಅಮೃತಾ ಕೃಷ್ಣಮೂರ್ತಿ ಆಚಾರ್ಯ, ವಿಜಯ ಬೈಲೂರು ಮಾಜಿ ಉಪಾಧ್ಯಕ್ಷೆ ಸಂಧ್ಯಾ ತಿಲಕ್, ಸತೀಶ್ ಕೊಡವೂರು ಬೆಂಬಲ ಸೂಚಿಸಿದರು.
ಪೌರ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಮಹೇಶ ಶೆಟ್ಟಿ, ಉಡುಪಿ ನಗರಸಭಾ ನೌಕರರ ಸಂಘದ ಅಧ್ಯಕ್ಷ ಸುಧಾಕರ ಕೋಟ್ಯಾನ್, ಮಾಜಿ ಅಧ್ಯಕ್ಷ ಮನೋಹರ ಜತ್ತನ್, ಪೌರಸೇವಾ ನೌಕರರ ಹೊರಗುತ್ತಿಗೆ ಸಿಬ್ಬಂದಿಗಳ ಸಂಘದ ಜಿಲ್ಲಾಧ್ಯಕ್ಷ ವಿನಯಕುಮಾರ್ ಭಾಗವಹಿಸಿದ್ದರು.