-->
ಡೆಂಗ್ಯೂ ತಡೆಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ಮಾಹಿತಿ ನೀಡಿ

ಡೆಂಗ್ಯೂ ತಡೆಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ಮಾಹಿತಿ ನೀಡಿ

ಲೋಕಬಂಧು ನ್ಯೂಸ್, ಉಡುಪಿ
ಡೆಂಗ್ಯೂ ಕೇವಲ ಜ್ವರ ಅಲ್ಲ. ಅದು ಸೋಂಕು ಹೊಂದಿದ ಈಡೀಸ್ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ. ನಿಂತ ನೀರಿನಲ್ಲಿ ಈ ಸೊಳ್ಳೆಗಳ ಸಂತಾನೋತ್ಪತ್ತಿಯಾಗುತ್ತದೆ. ಅವುಗಳನ್ನು ನಾಶಪಡಿಸಲು ಹಾಗೂ ಡೆಂಗ್ಯೂ ರೋಗ ಹರಡದಂತೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ವ್ಯಾಪಕ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಶುಕ್ರವಾರ ಅಲೆವೂರು ಪ್ರಗತಿ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಗತಿ ನಗರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಧ್ಯೇಯವಾಕ್ಯ `ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ- ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಗೊಳಿಸಿ' ಎಂಬಂತೆ ಸಾರ್ವಜನಿಕರು ಹಾಗೂ ಈ ಕಾರ್ಯದಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳು ರಾಯಭಾರಿಗಳಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಬೇಕು. ಜಿಲ್ಲೆಯಲ್ಲಿ ಎಲ್ಲಾ ನಾಗರಿಕರಲ್ಲಿ ಡೆಂಗ್ಯೂ ಹಾಗೂ ಇನ್ನಿತರ ಕೀಟಜನ್ಯ ಕಾಯಿಲೆಗಳನ್ನು ನಿಯಂತ್ರಿಸಿ ಆರೋಗ್ಯಕರ ಉಡುಪಿ ಜಿಲ್ಲೆಯನ್ನಾಗಿಸಲು ಕ್ರಮ ವಹಿಸಬೇಕು ಎಂದರು.


ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್, ಸದಸ್ಯ ಶ್ರೀಕಾಂತ ನಾಯಕ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ರೋಟರಿ ಮಣಿಪಾಲ್ ಹಿಲ್ಸ್ ಅಧ್ಯಕ್ಷೆ ಸುಪರ್ಣ ಶೆಟ್ಟಿ, ಸದಸ್ಯರಾದ ಸುದೇಶ್ ರೈ, ಸುಂದರ ಶೆಟ್ಟಿ ಹಾಗೂ ಭೋಜರಾಜ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಶಿವಕುಮಾರ್, ಸಂಯೋಜಕರಾದ ಅನಿತಾ ಹಾಗೂ ಮಧುಸೂದನ್ ಮೊದಲಾದವರಿದ್ದರು.


ಕೀಟ ಶಾಸ್ತ್ರಜ್ಞೆ ಮುಕ್ತಾ ಆಚಾರಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಎಚ್. ಮತ್ತು ಚಂದ್ರಕಲಾ, ಡಿವಿಬಿಡಿಸಿ ಕಚೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು ಇದ್ದರು.


ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಸ್ವಾಗತಿಸಿ ನಿರೂಪಿಸಿದರು. ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಂಜಲಿ ವಾಗ್ಲೆ ವಂದಿಸಿದರು

Ads on article

Advertise in articles 1

advertising articles 2

Advertise under the article