ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
Thursday, May 15, 2025
ಲೋಕಬಂಧು ನ್ಯೂಸ್, ಕುಂದಾಪುರ
ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ಗುರುವಾರ ಸಂಭವಿಸಿದೆ.ಆ ಪೈಕಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿ ಪರಿಸ್ಥಿತಿ ಗಂಭೀರವಾಗಿದೆ.
ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ (56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ (22) ಗುರುತಿಸಲಾಗಿದೆ. ಕಂಚುಗಾರುಬೆಟ್ಟು ನಿವಾಸಿ ತಾರಾ ದೇವಾಡಿಗ ಪರಿಸ್ಥಿತಿ ಗಂಭೀರವಾಗಿದ್ದು, ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾರಾ ದೇವಾಡಿಗ ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು.
ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.