
ಜು.1: ಪತ್ರಿಕಾ ದಿನಾಚರಣೆ; ಕುಂಡಂತಾಯರಿಗೆ ಪತ್ರಿಕಾ ದಿನದ ಗೌರವ
Wednesday, June 25, 2025
ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ಭವನ ಸಮಿತಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಸಹಯೋಗದೊಂದಿಗೆ ಜುಲೈ 1ರಂದು ಪತ್ರಿಕಾ ದಿನಾಚರಣೆ ನಡೆಯಲಿದೆ. ಹಿರಿಯ ಪತ್ರಕರ್ತ ಕುಂಜೂರು ಲಕ್ಷ್ಮೀನಾರಾಯಣ ಕುಂಡಂತಾಯ (ಕೆ.ಎಲ್.ಕುಂಡಂತಾಯ) ಅವರಿಗೆ ಪತ್ರಿಕಾ ದಿನದ ಗೌರವ ನೀಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸುವರು. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸುವರು.
ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ರಾಜಾರಾಮ್ ತಲ್ಲೂರು ಮಾಧ್ಯಮ: ಮುಂದಿನ 10ವರ್ಷಗಳ- ಮಿಡಿಯಾ ಕನ್ವರ್ಜೆನ್ಸ್, ಎಲ್ಎಲ್ಎಂ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ಇದೇ ಸಂದರ್ಭದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ನೀಡುವ ಪ್ರತಿಭಾ ಪುರಸ್ಕಾರವನ್ನು ಮಣಿಪಾಲ ಎಚ್ಪಿಆರ್ ಸಂಸ್ಥೆಗಳ ಮುಖ್ಯಸ್ಥ ಹರಿಪ್ರಸಾದ್ ರೈ ನೆರವೇರಿಸುವರು.
ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸುವರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶೀರೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಹಾಗೂ ಪತ್ರಿಕಾ ಭವನ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿರುವರು.