
ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ಕ್ರಮ ಕೈಗೊಳ್ಳಿ
Friday, July 4, 2025
ಲೋಕಬಂಧು ನ್ಯೂಸ್, ಉಡುಪಿ
ಬ್ರಹ್ಮಾವರದ ಕುಂಜಾಲಿನಲ್ಲಿ ಗೋವಿನ ರುಂಡ ಪತ್ತೆ ಪ್ರಕರಣದಲ್ಲಿ ಜಿಹಾದಿಗಳ ಕೈವಾಡ ಇದೆ ಎಂದಿರುವ ವಿಶ್ವ ಹಿಂದೂ ಪರಿಷದ್ ನಾಯಕ ಶರಣ್ ಪಂಪ್'ವೆಲ್ ಅವರನ್ನು ಕೂಡಲೇ ಬಂಧಿಸಿ ಅವರ ಹೇಳಿಕೆ ಕುರಿತ ಎಲ್ಲಾ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಡೆಯಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.
ಶರಣ್ ಪಂಪ್'ವೆಲ್ ಈಗಾಗಲೇ ಕೋಮು ಪ್ರಚೋದಕ ಹೇಳಿಕೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಮೂಡಿಸುಸುವ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಅವರು ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಉಡುಪಿಗೆ ಆಗಮಿಸಿ ಇಲ್ಲಿ ಸೌಹಾರ್ದತೆಯಿಂದ ಬದುಕುತ್ತಿರುವ ಜನರ ಮಧ್ಯೆ ಅನುಮಾನ ಮತ್ತು ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡಲು ಜಿಲ್ಲಾ ಪೊಲೀಸ್ ಇಲಾಖೆ ಅವಕಾಶ ನೀಡಬಾರದು.
ಕುಂಜಾಲಿನಲ್ಲಿ ಗೋ ಹತ್ಯೆ ಆರೋಪಿಗಳು ಹಿಂದೂಗಳಾಗಿದ್ದು ಅವರನ್ನು ಬಳಸಿಕೊಂಡು ಜಿಹಾದಿ ಶಕ್ತಿಗಳು ಕರ್ತವ್ಯ ನಿರ್ವಹಿಸುತ್ತಿದೆ ಎಂದು ಶರಣ್ ಪಂಪ್'ವೆಲ್ ಅವರು ಹೇಳಿದ್ದು, ಅವರಲ್ಲಿ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇರುವ ಸಂಶಯ ಇದೆ. ಆದ್ದರಿಂದ ಅವರನ್ನು ಕೂಡಲೇ ಬಂಧಿಸಿ ಅವರಿಂದ ಸಂಪೂರ್ಣ ಮಾಹಿತಿ ಪಡೆಯಬೇಕು. ಆ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ಕೆಲಸವನ್ನು ಪೊಲೀಸರು ಮಾಡಬೇಕು ಎಂದು ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.