-->
ಧರ್ಮಸ್ಥಳ ಪ್ರಕರಣ NIAಗೆ ವಹಿಸಿ

ಧರ್ಮಸ್ಥಳ ಪ್ರಕರಣ NIAಗೆ ವಹಿಸಿ

ಲೋಕಬಂಧು ನ್ಯೂಸ್, ಬೆಂಗಳೂರು
ಧರ್ಮಸ್ಥಳ ಪ್ರಕರಣದ ಸಂಪೂರ್ಣ ತನಿಖೆಯನ್ನು ಕೂಡಲೇ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಐಎ ತನಿಖೆ ಮಾಡಿದರೆ ರಾಜ್ಯ ಸರಕಾರದ ಬಗ್ಗೆ ಜನರಿಗೆ ಮತ್ತು ಅಪಾರ ಭಕ್ತರಿಗೆ ವಿಶ್ವಾಸ ಬರಲಿದೆ. ಆದ್ದರಿಂದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಧಾರವನ್ನು ತಕ್ಷಣ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.


ಇದೇ ಆಗ್ರಹವನ್ನು ಮುಂದಿಟ್ಟು ಸೆ.1ರಂದು ಧರ್ಮಸ್ಥಳ ಚಲೋಗೆ ಕರೆ ನೀಡುತ್ತಿರುವುದಾಗಿ ಪ್ರಕಟಿಸಿದರು.


ಹಿಂದೂ ಭಾವನೆಗೆ ಧಕ್ಕೆ ತಂದ ಸರಕಾರದ ಕಿವಿ ಹಿಂಡುವ ಕೆಲಸ ಆಗಬೇಕಿದೆ. ಎನ್‌ಐಎ ತನಿಖೆಯ ಆಗ್ರಹದ ಬೇಡಿಕೆ ಮುಂದಿಟ್ಟು ರಾಜ್ಯದ ಸಮಸ್ತ ಹಿಂದೂ ಸಮಾಜ ಅದರಲ್ಲಿ ಪಾಲ್ಗೊಳ್ಳಬೇಕು. ಸೆ.1ರಂದು ಬೃಹತ್‌ ಸಮಾವೇಶ ಮಾಡಲಿದ್ದೇವೆ ಎಂದರು.


ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರ, ಎಲ್ಲ ಜಿಲ್ಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಧರ್ಮಸ್ಥಳಕ್ಕೆ ಬರಲಿದ್ದಾರೆ. ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ ಎಂದರು.


ಧರ್ಮಸ್ಥಳ ಪ್ರಕರಣದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಅದರಿಂದ ಹೊರಬರಬೇಕಾದರೆ ಸಮರ್ಪಕ ತನಿಖೆ ಅಗತ್ಯ. ಅಪಪ್ರಚಾರ ಮಾಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ವಿಷಯದಲ್ಲಿ ವಿಶೇಷ ತನಿಖಾ ತಂಡ ರಚಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತುರ ತೋರಿದ್ದು, ಖಂಡನೀಯ ಎಂದರು.


ಅನಾಮಿಕ ನೀಡಿದ ದೂರು ಆಧರಿಸಿ, ತನಿಖೆಗೆ ಆದೇಶಿಸುವ ಮುನ್ನ ಅದರ ಬಗ್ಗೆ ಗುಪ್ತಚರದಿಂದ ಸಮಗ್ರ ಮಾಹಿತಿ ಪಡೆದು, ಅನಂತರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿತ್ತು. ಅದನ್ನು ಬಿಟ್ಟು ಏಕಾಏಕಿ ತನಿಖೆಗೆ ಆದೇಶಿಸಿದ್ದು, ಒಳ್ಳೆಯ ಬೆಳವಣಿಗೆಯಲ್ಲ. ಪ್ರಕರಣವನ್ನು ಎಸ್ಐಟಿಗೆ ಒಪ್ಪಿಸಿರುವ ಹಿಂದಿರುವ ಶಕ್ತಿಗಳ ಕುರಿತು ತನಿಖೆ ಮಾಡಬೇಕು ಎಂದರು.


ಸೆ.1ರಂದು ಬೆಳಗ್ಗೆ ತಮ್ಮ ತಮ್ಮ ನಗರ, ಗ್ರಾಮದಲ್ಲಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ, ವಾಹನದಲ್ಲಿ ಮೆರವಣಿಗೆ ಮುಗಿಸಿ ಧರ್ಮಸ್ಥಳಕ್ಕೆ ಆಗಮಿಸಬೇಕು. ಸೆ. 2ರಂದು ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮಾವೇಶ ನಡೆಯಲಿದೆ. ಎಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಬರಬೇಕು ಎಂದು ವಿಜಯೇಂದ್ರ ಮನವಿ ಮಾಡಿದರು.

Ads on article

Advertise in articles 1

advertising articles 2

Advertise under the article