
scouts ಚಟುವಟಿಕೆಯಲ್ಲಿ ಯೋಗ ಅಳವಡಿಕೆಗೆ ಚಿಂತನೆ
Monday, August 25, 2025
ಲೋಕಬಂಧು ನ್ಯೂಸ್, ಉಡುಪಿ
ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಚಿಂತನೆ ಇದ್ದು, ಅದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.
ನಗರದ ಬೋರ್ಡ್ ಹೈಸ್ಕೂಲ್'ನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್ ಸೌಟ್ ಮತ್ತು ಗೈಡ್ಸ್ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಸೋಮವಾರ ಆಯೋಜಿಸಿದ್ದ ರೋವರಿಂಗ್ ಮತ್ತು ರೇಂಜರಿಂಗ್ ಪ್ರಾರಂಭಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರೋವರ್ಸ್ ಮತ್ತು ರೇಂಜರ್'ಗಳಿಗೆ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ಕಮ್ಯುನಿಷ್ಟ್ ರಾಷ್ಟ್ರಗಳಲ್ಲಿ ಜನರು ಶಿಸ್ತು ಮತ್ತು ಸಮಯಪ್ರಜ್ಞೆ ಅಳವಡಿಸಿಕೊಂಡಿದ್ದರಿಂದ ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದರು.
ಜಿಲ್ಲೆಯ ಮುತ್ಸದ್ದಿ ರಾಜಕಾರಣಿ ಡಾ. ವಿ.ಎಸ್.ಆಚಾರ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಎಲ್ಲಾ ಕಾಲೇಜುಗಳಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಡ್ಡಾಯಗೊಳಿಸಿದ್ದರು ಎಂದು ಸ್ಮರಿಸಿದರು.
ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಂಟನಾ ಆಯುಕ್ತ ಎಂ.ಪ್ರಭಾಕರ ಭಟ್, ಡಿಡಿಪಿಯು ಮಾರುತಿ, ಪ.ಪೂ.ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ವರ್ಗೀಸ್ ಪಿ., ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಗೈಡ್ಸ್ ಆಯುಕ್ತೆ ಜ್ಯೋತಿ ಪೈ, ಖಜಾಂಚಿ ಹರಿಪ್ರಸಾದ್ ರೈ, ಶಿಬಿರ ನಾಯಕ ಗುರುಮೂರ್ತಿ, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ರಾಜ್ಯ ಸಂಘಟನಾ ಸಹ ಕಾರ್ಯದರ್ಶಿ ಸುಮನ ಶೇಖರ್, ಕಾಲೇಜು ಪ್ರಾಂಶುಪಾಲೆ ಲೀಲಾವತಿ ಮೊದಲಾದವರಿದ್ದರು.
ಉದಯ ಭಾಸ್ಕರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಹರೀಶ್ ವಂದಿಸಿದರು.