-->
Udupi: 'ಧರ್ಮಸ್ಥಳ ಚಲೋ'ಗೆ 15 ಸಾವಿರ ಮಂದಿ

Udupi: 'ಧರ್ಮಸ್ಥಳ ಚಲೋ'ಗೆ 15 ಸಾವಿರ ಮಂದಿ

ಲೋಕಬಂಧು ನ್ಯೂಸ್, ಉಡುಪಿ
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣದ ತನಿಖೆಯನ್ನು ಎನ್.ಐ.ಎ.ಗೆ ವಹಿಸಬೇಕೆಂಬ ಆಗ್ರಹದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ನಡೆಯುವ 'ಧರ್ಮಸ್ಥಳ ಚಲೋ' ಅಭಿಯಾನದಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಸುಮಾರು 15 ಸಾವಿರಕ್ಕೂ ಅಧಿಕ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ನಡೆದ ಅವಿಭಜಿತ ದ.ಕ. ಜಿಲ್ಲೆಯ ಜಿಲ್ಲಾಧ್ಯಕ್ಷರು, ಸಂಸದರು, ಶಾಸಕರು ಹಾಗೂ ಪಕ್ಷ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಧರ್ಮ ರಕ್ಷಣೆಗಾಗಿ 'ಧರ್ಮಸ್ಥಳ ಚಲೋ' ಅಭಿಯಾನದ ರಾಜ್ಯ ಸಂಚಾಲಕ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಸಹ ಸಂಚಾಲಕರಾದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಭಿಯಾನದ ರೂಪುರೇಷೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದ್ದಾರೆ. ಉಭಯ ಜಿಲ್ಲೆಗಳಿಂದ ಗರಿಷ್ಠ ಸಂಖ್ಯೆಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು 'ಧರ್ಮಸ್ಥಳ ಚಲೋ' ಅಭಿಯಾನದಲ್ಲಿ ಪಾಲ್ಗೊಳ್ಳಲು ಸಜ್ಜುಗೊಳಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಗಿದೆ.


ಈ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಜೊತೆಗೆ ಶಾಸಕರ ನೇತೃತ್ವದಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರವಾರು ಅಭಿಯಾನದ ಪೂರ್ವ ಸಿದ್ಧತಾ ಸಭೆಗಳು ನಡೆದಿದ್ದು, ಸೆ.1ರಂದು ಮಧ್ಯಾಹ್ನ 12.30ರೊಳಗೆ ಧರ್ಮಸ್ಥಳದಲ್ಲಿ ಉಪಸ್ಥಿತರಿದ್ದು, ಮಧ್ಯಾಹ್ನ 2ರಿಂದ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕುತ್ಯಾರು ತಿಳಿಸಿದರು.


ಈ ಹಿಂದೆ ಶಬರಿಮಲೆ, ತಿರುಪತಿ, ಈಶ ಫೌಂಡೇಶನ್ ಬಳಿಕ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳದ ಸಹಿತ ಇತರ ಪ್ರಮುಖ ದೇವಸ್ಥಾನಗಳ ವಿರುದ್ಧ ಸಂಚು ರೂಪಿಸಿ ಹಿಂದೂಗಳ ಅಸ್ಮಿತೆ, ನಂಬಿಕೆ ಹಾಗೂ ಭಾವನೆಗಳಿಗೆ ಘಾಸಿಯನ್ನುಂಟುಮಾಡುತ್ತಿರುವ ಧರ್ಮದ್ರೋಹಿಗಳು‌ ಮತ್ತು ಹಿಂದೂ ವಿರೋಧಿಗಳಿಗೆ ಕಠಿಣ ಎಚ್ಚರಿಕೆ ನೀಡುವ ಜೊತೆಗೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಬದ್ಧತೆ ತೋರುವ ನಿಟ್ಟಿನಲ್ಲಿ 'ಧರ್ಮಸ್ಥಳ ಚಲೋ' ಅಭಿಯಾನವನ್ನು ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ವಿನಂತಿಸಿದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ನಿರೂಪಿಸಿ, ವಂದಿಸಿದರು.

Ads on article

Advertise in articles 1

advertising articles 2

Advertise under the article