-->
Ujire: ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಸಹಕಾರಿಗಳ ಪೂರ್ಣ ಬೆಂಬಲ

Ujire: ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಸಹಕಾರಿಗಳ ಪೂರ್ಣ ಬೆಂಬಲ

ಲೋಕಬಂಧು ನ್ಯೂಸ್, ಉಜಿರೆ
ನಾಡಿನ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿ ಖಂಡನೀಯ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಪೂರ್ಣ ಬೆಂಬಲ ಹಾಗೂ ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಜಾತಿ ಮತ ಪಕ್ಷ ಬೇಧ ಮರೆತು ಸರ್ವ ಸಹಕಾರಿಗಳೂ ಸದಾ ಸಿದ್ಧ ಹಾಗೂ ಬದ್ಧ. ಧರ್ಮಸ್ಥಳದೊಂದಿಗೆ ಸದಾ ಇರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಭರವಸೆ ನೀಡಿದರು.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾ ಮೂಲಕ ಆಗಮಿಸಿ, ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆದ ಧರ್ಮಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಎಲ್ಲರೂ ಸದಾ ಹೆಗ್ಗಡೆಯವರ ಜೊತೆಗಿದ್ದು, ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಧರ್ಮಸ್ಥಳ ಕ್ಷೇತ್ರದ ರಕ್ಷಣೆ ಎಲ್ಲಾ ಭಕ್ತರು ಹಾಗೂ ಅಭಿಮಾನಿಗಳ ಕರ್ತವ್ಯ ಮತ್ತು ಹೊಣೆಗಾರಿಕೆ ಆಗಿದ್ದು, ಇಂಥ ಪವಿತ್ರ ಸೇವೆಯಿಂದ ಭಕ್ತರ ಮನಸ್ಸಿಗೂ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದರು.
ಸತ್ಯದ ಜೊತೆಗೆ ನಾವಿದ್ದೇವೆ
ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಮಾತನಾಡಿ ಸತ್ಯ, ಧರ್ಮ, ನ್ಯಾಯ, ನೀತಿ ಸದಾ ನೆಲೆ ನಿಂತಿರುವ ಧರ್ಮಸ್ಥಳದ  ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಿದ್ದೇವೆ. 'ಸತ್ಯಮೇವ ಜಯತೇ' ಎಂಬಂತೆ ಸತ್ಯಕ್ಕೆ ಸದಾ ಜಯವಿದೆ. ಸತ್ಯದ ಜೊತೆಗೆ ನಾವಿದ್ದೇವೆ ಎಂದು ಭರವಸೆ‌ ನೀಡಿದರು.
ಡಾ.ಹೆಗ್ಗಡೆ ನೇತೃತ್ವದಲ್ಲಿ ಹಲವು ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಧರ್ಮಸ್ಥಳ ಇಂದು ಇಡೀ ದೇಶಕ್ಕೆ ಮಾದರಿ ಸಂಸ್ಥೆಯಾಗಿದೆ ಎಂದವರು ಶ್ಲಾಘಿಸಿದರು.
ಹೆಚ್ಚಿದ ಭರವಸೆ,ಉತ್ಸಾಹ
ಧರ್ಮಾಧಿಕಾರಿ ಡಾ‌ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ ವಿಶ್ವಾಸ, ಗೌರವ ಮತ್ತು ಅಭಿಮಾನ ತಮಗೆ ಹೆಚ್ಚಿನ ಉತ್ಸಾಹ ಮತ್ತು ಭರವಸೆ ಮೂಡಿಸಿದೆ.
ಸಹಕಾರಿ ಕ್ಷೇತ್ರವನ್ನು ತಮ್ಮ ಮಾರ್ಗದರ್ಶಿತ್ವ ಮತ್ತು ನಾಯಕತ್ವದೊಂದಿಗೆ ಜನಪ್ರಿಯಗೊಳಿಸಿದ ರಾಜೇಂದ್ರ ಕುಮಾರ್ ಸೇವೆ, ಸಾಧನೆಯನ್ನು ಶ್ಲಾಘಿಸಿ ಸಮಾಜಕ್ಕೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಇಂಥ ದಕ್ಷ,  ಪ್ರಾಮಾಣಿಕ ಹಾಗೂ ನಿಷ್ವಾರ್ಥ ನಾಯಕರ ಅಗತ್ಯವಿದೆ. ಸಹಕಾರಿ ರಂಗವನ್ನು ರಾಜ್ಯ ಮಟ್ಟದ ಖ್ಯಾತಿಗೆ ಬೆಳೆಸಿರುವುದು ಶ್ಲಾಘನೀಯ ಎಂದು ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ನೀಡಲಾಗಿದೆ. ಅಲ್ಲದೆ, ಧರ್ಮಸ್ಥಳದಿಂದ ಎಲ್ಲಾ ಸಹಕಾರಿ ಸಂಘಗಳಿಗೂ ಸಕಾಲಿಕ ನೆರವು, ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಮಾಧ್ಯಮಗಳಲ್ಲಿ ಅಪಪ್ರಚಾರ ಹಾಗೂ ಸುಳ್ಳು ವದಂತಿ ಪ್ರಸಾರದಿಂದ ತಮಗೆ ಆಘಾತಕರ ನೋವುಂಟಾಗಿದೆ. ಆದರೆ, ಧಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಚಂದ್ರನಾಥ ಸ್ವಾಮಿ ಇಬ್ಬರೂ ಶಾಂತ ಸ್ವಭಾವದವರಾಗಿದ್ದು ದೇವರ ಅನುಗ್ರಹ, ಧರ್ಮದೇವತೆಗಳು ಮತ್ತು ಅಣ್ಣಪ್ಪ ಸ್ವಾಮಿಯ ಅಭಯದಿಂದ ನೋವು ಮರೆಯಲು ಸಾಧ್ಯವಾಗಿದೆ.
ಅಪವಾದ, ಅಪಪ್ರಚಾರ ಮಾಡಿದವರಿಗೂ ಅಭಿನಂದನೆ ಹೇಳಿದ ಹೆಗ್ಗಡೆ, ಅವರಿಂದಾಗಿ ಪ್ರತಿದಿನ ಸಾವಿರಾರು ಮಂದಿ ಧರ್ಮಸ್ಥಳಕ್ಕೆ ಬಂದು ತಮ್ಮ ಪ್ರೀತಿ ವಿಶ್ವಾಸ, ಗೌರವ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.


ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಬೆಳಪು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.


ಸುಮಾರು 10 ಸಾವಿರ ಮಂದಿ ಜಾಥಾದಲ್ಲಿ ಆಗಮಿಸಿದ್ದರು.


ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ  ಸ್ವಾಗತಿಸಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್  ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಂದಿಸಿದರು.

Ads on article

Advertise in articles 1

advertising articles 2

Advertise under the article