ಡಿ.13: ಉಡುಪಿಯಲ್ಲಿ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನೇತೃತ್ವದಲ್ಲಿ ಈ ತಿಂಗಳ 13ರಂದು ಕೃಷ್ಣಮಠ ರಾಜಾಂಗಣ ಬಳಿಯ ವಾಹನ ನಿಲುಗಡೆ ಪ್ರದೇಶದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೀಡುವರು ಎಂದು ಘಟಕದ ಜೊತೆ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದ ಅವರು, ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಡಾ.ಮೋಹನ ಆಳ್ವ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಪೇಜಾವರ ಮಠದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಹೆಸರನ್ನು ವೇದಿಕೆಗೆ ಇಡಲಾಗಿದೆ. ಮಾಜಿ ಸಚಿವ ಕೀರ್ತಿಶೇಷ ಡಾ.ವಿ.ಎಸ್. ಆಚಾರ್ಯ ಅವರಿಗೆ ಕಾರ್ಯಕ್ರಮ ಅರ್ಪಿಸಲಾಗಿದೆ ಎಂದರು.
ಅಂದು ಸಂಜೆ 5.45ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಸಲಿದ್ದು, ಭಾರತೀಯ ಕಲಾಪ್ರಕಾರಗಳಾದ ಯೋಗದೀಪಿಕಾ, ಶಾಸ್ತ್ರೀಯ ನೃತ್ಯ ಅಷ್ಟಲಕ್ಷ್ಮೀ, ಬಡಗತಿಟ್ಟು ಯಕ್ಷಗಾನ- ಶಂಕರಾರ್ಧಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ- ಹಿರಣ್ಯಾಕ್ಷ ವಧೆ ಇತ್ಯಾದಿ ಸುಮಾರು 3 ಗಂಟೆಗಳ ಪ್ರದರ್ಶನವಿದೆ ಎಂದರು.


ಕಾರ್ಯಕ್ರಮದ ಆರಂಭದಲ್ಲಿ ಸಂಜೆ 5ರಿಂದ ಆಳ್ವಾಸ್ ವಿದ್ಯಾರ್ಥಿಗಳಿಂದ ಚೆಂಡೆ, ವಯೊಲಿನ್, ಕೊಳಲು ಮತ್ತು ಕೀಬೋರ್ಡ್'ಗಳ ಸಿಂಗಾರಿ ಮೇಳ ಫ್ಯೂಷನ್ ನಡೆಯಲಿದ್ದು, ಬೊಂಬೆ ವಿನೋದಾವಳಿಗಳೊಂದಿಗೆ ಆಕರ್ಷಕ ಸುಡುಮದ್ದು ಪ್ರದರ್ಶನವಿದೆ ಎಂದು ಕಡೆಕಾರ್ ತಿಳಿಸಿದರು.


ನಿಗದಿತ ಸಮಯಕ್ಕೆ ಆರಂಭ
ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ಆರಂಭಗೊಳ್ಳಲಿದ್ದು, ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು.


ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು, ಡಾ. ಮೋಹನ ಆಳ್ವ ಉಪಸ್ಥಿತರಿರುವರು. ಸಮಾಜದ ಎಲ್ಲಾ ಸ್ತರದ ಸುಮಾರು 150 ಮಂದಿ ಮಹನೀಯರು ಗೌರವ ಅಭ್ಯಾಗತರಾಗಿರುವರು. ಸುಮಾರು 15 ಸಾವಿರ ಮಂದಿ ಪ್ರೇಕ್ಷಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಮುರಳಿ ಕಡೆಕಾರ್  ವಿವರಿಸಿದರು.
ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕ ಉಪಾಧ್ಯಕ್ಷ ವಿ.ಜಿ. ಶೆಟ್ಟಿ, ಕಾರ್ಯದರ್ಶಿ ಭುವನ ಪ್ರಸಾದ ಹೆಗ್ಡೆ ಮಣಿಪಾಲ, ಬೈಕಾಡಿ ಸುಪ್ರಸಾದ ಶೆಟ್ಟಿ, ಆಳ್ವಾಸ್ ಸಂಸ್ಥೆಯ ನಿಧೀಶ್, ಅಂಬರೀಶ್ ಹಾಗೂ ಪ್ರಸಾದ್ ಸುದ್ದಿಗೋಷ್ಠಿಯಲ್ಲಿದ್ದರು.