ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷರಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಮಾ.15
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಎಸ್. ಕೋಸಂಬೆ ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ವಿಶೇಷ ನವಜಾತ ಶಿಶುಗಳ ಚಿಕಿತ್ಸಾ ಘಟಕ, ತಾಯಿ ಆರೈಕೆ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿದರು.
ವಿಶೇಷ ನವಜಾತ ಶಿಶು ಚಿಕಿತ್ಸಾ ಘಟಕದಲ್ಲಿ ನವಜಾತ ಶಿಶುಗಳಿಗೆ ಆರೈಕೆ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದು ಘಟಕದಲ್ಲಿ ನಿರ್ವಹಿಸುತ್ತಿರುವ ರಿಜಿಸ್ಟರ್‌ಗಳು ಹಾಗೂ ಕಡತಗಳನ್ನು ಪರಿಶೀಲಿಸಿ, ಸರಕಾರದ ಮಾರ್ಗಸೂಚಿಯನ್ವಯ ರಿಜಿಸ್ಟರ್‌ಗಳನ್ನು ನಿರ್ವಹಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು.
ಚಿಕಿತ್ಸೆ ಪಡೆಯುತ್ತಿರುವ ನವಜಾತ ಶಿಶುಗಳ ಕೇಸ್- ಶೀಟ್ ಗಳಲ್ಲಿ ಮಕ್ಕಳ ಹೆಸರು ಅಥವಾ ಅವರ ತಂದೆ-ತಾಯಿ ಹೆಸರು ನಮೂದಿಸದೇ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವುಗಳ ನಿರ್ವಹಣೆಯನ್ನು ನಿಯಮಾನುಸಾರ ಮಾಡುವಂತೆ ಅಲ್ಲಿನ ವೈದ್ಯರಿಗೆ ತಿಳಿಸಿದ ಅವರು, ಸರಿಯಾಗಿ ನಿರ್ವಹಿಸದಿರುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಸರ್ಜನ್‌ಗೆ ಸೂಚಿಸಿದರು.


ತಾಯಿ ಆರೈಕೆ ಘಟಕ ಹಾಗೂ ಹಾಲುಣಿಸುವ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ವ್ಯವಸ್ಥೆ ವೈಜ್ಞಾನಿಕವಾಗಿ ಇಲ್ಲದೇ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅಲ್ಲಿನ ಮೂಲಭೂತ ಸೌಕರ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ಕಲ್ಪಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ತಾಯಂದಿರಿಗೆ ಆರೋಗ್ಯ ಶಿಕ್ಷಣ ಬಗ್ಗೆ ಮಾಹಿತಿ ನೀಡಲು ತಿಳಿಸಿದರು.


ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿವೆ. ಶೀಘ್ರ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯುವಂತೆ ಅಲ್ಲಿನ ಸ್ಥಳೀಯ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿವ ಜೊತೆಗೆ ದೂರವಾಣಿ ಮೂಲಕ ಎನ್.ಆರ್.ಸಿ ಕೆಂದ್ರದ ಉಪ ನಿರ್ದೇಶಕ ಕಬಾಡಿ ಜೊತೆ ಚರ್ಚಿಸಿದರು.


ನಗರದ ಆದರ್ಶ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್‌ಗೆ ಭೇಟಿ ನೀಡಿ ಅಲ್ಲಿನ ಕಡತಗಳು, ನಿಗದಿತ ನಮೂನೆಯ ರಿಜಿಸ್ಟರ್‌ಗಳ ನಿರ್ವಹಣೆ, ಸೂಚನಾ ಫಲಕಗಳ ಅಳವಡಿಕೆ, ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದ ಅವರು, ಸರಕಾರದ ಮಾರ್ಗಸೂಚಿಯನ್ವಯ ದಾಖಲೆಗಳನ್ನು ನಿರ್ವಹಿಸಬೇಕು. ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವ ಮುನ್ನ ಸರಕಾರದ ಪೋರ್ಟಲ್ ಬಾಲಿಕಾ ಸಾಫ್ಟ್‌ವೇರ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದರು.


ನಂತರ ಬ್ರಹ್ಮಾವರ ಪೊಲೀಸ್ ಠಾಣೆ, ಹಂದಾಡಿ ಗ್ರಾ. ಪಂ. ಕಚೇರಿಗಳಿಗೆ ಭೇಟಿ ನೀಡಿದರು. ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಎಲ್ಲಾ ಕಚೇರಿಗಳಲ್ಲಿಯೂ ನಮೂದಿಸಬೇಕು. ಗ್ರಾಮ ಪಂಚಾಯತ್ ಗಳಲ್ಲಿ ಮಕ್ಕಳ ಗ್ರಾಮಸಭೆ, ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಶಿಕ್ಷಣ ಕಾರ್ಯಪಡೆಯ ಸಭೆಯನ್ನು ಆಗಾಗ ನಡೆಸಬೇಕು ಎಂದರು.


ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್, ವಾರ್ತಾಧಿಕಾರಿ ಮಂಜುನಾಥ್ ಬಿ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ನಿವಾಸಿ ವೈದ್ಯಾಧಿಕಾರಿ ವಾಸುದೇವ್ ಮೊದಲಾದವರಿದ್ದರು.