ಲೋಕಬಂಧು ನ್ಯೂಸ್ | ಉಡುಪಿ, ಮಾ.14
ವಿವಿಧ ಪ್ರಕರಣಗಳಲ್ಲಿ ರೌಡಿಶೀಟರ್ ಗಳಾಗಿದ್ದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಸಂದೇಶ ನಾಯ್ಕ್ ಮತ್ತು ಸುಶಾಂತ್ ಪೂಜಾರಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಬ್ಬಾರ್ ಹುಸೈನ್ ವಿರುದ್ಧ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಕಾಪು ನಡ್ಸಾಲು ಗ್ರಾಮದ ಜಬ್ಬಾರ್ ಹುಸೈನ್ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಆತನ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಗಳೂರು ಠಾಣೆಗಳಲ್ಲಿ ಒಟ್ಟು 16 ಪ್ರಕರಣ ದಾಖಲಾಗಿವೆ. ಆತನನ್ನು ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಹಿರಿಯಡ್ಕ ಸಮೀಪದ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ನಿವಾಸಿ ಸಂದೇಶ ನಾಯ್ಕ್ ವಿರುದ್ಧ 5 ಪ್ರಕರಣ ದಾಖಲಾಗಿ ರೌಡಿ ಶೀಟ್ ತೆರೆಯಲಾಗಿದೆ. ಆತನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಹಿರಿಯಡ್ಕ ಸಮೀಪದ ಪಾಪುಜೆ ನಿವಾಸಿ ಸುಶಾಂತ್ ಪೂಜಾರಿ ವಿರುದ್ಧ 3 ಪ್ರಕರಣ ದಾಖಲಾಗಿದೆ. ಆತನನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.