ಉಡುಪಿ ಸಿಟಿ ಬಸ್ ನಿಲ್ದಾಣ ಬಳಿ ಅಗ್ನಿ ಅವಘಡ

ಲೋಕಬಂಧು ನ್ಯೂಸ್ ಉಡುಪಿ, ಏ.26
ನಗರದ ಸಿಟಿ ಬಸ್ ನಿಲ್ದಾಣದ ಬಳಿ ಭಾನುವಾರ ಸಂಜೆ ವೇಳೆಗೆ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಹಲವು ಅಂಗಡಿಗಳು ಭಸ್ಮಗೊಂಡಿವೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್‌'ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದಂತೆ ಬೆಂಕಿ ವ್ಯಾಪಕವಾಗಿ ಹರಡಿದ್ದು ಹಲವು ಅಂಗಡಿಗಳು ಭಸ್ಮವಾಗಿವೆ.


ಕಟ್ಟಡದಲ್ಲಿದ್ದ ಮೊಬೈಲ್ ಅಂಗಡಿ ಹಾಗೂ ಹಾರ್ಡ್‌ವೇ‌ರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಜ್ವಾಲೆ ವ್ಯಾಪಿಸಿ ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಿಂದ ವ್ಯಾಪಾರಿಗಳಿಗೆ ಭಾರೀ ಆರ್ಥಿಕ ನಷ್ಟವುಂಟಾಗಿದೆ.


ಘಟನೆ ಸಂಭವಿಸುತ್ತಿದ್ದಂತೆಯೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ಕೂಡಾ ಬೆಂಕಿ ಹತೋಟಿಗೆ ಬಂದಿಲ್ಲ. ಅಗ್ನಿಶಾಮಕ ದಳದವರ ಕಾರ್ಯಾಚರಣೆ ಮುಂದುವರಿದಿದೆ.