ಲೋಕಬಂಧು ನ್ಯೂಸ್ | ಉಡುಪಿ, ಏ.2
ಏಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣೆಯನ್ನು ಸಾರುವ 'ಪವಿತ್ರ ಗುರುವಾರ' (ಮೊಂಡಿ ಥರ್ಸ್ಡೇ)ವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್'ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು.
ಧರ್ಮಾಧ್ಯಕ್ಷರು 12 ಮಂದಿ ಪ್ರೇಷಿತರ ಪಾದ ತೊಳೆಯುವ ಮೂಲಕ ಏಸುಕ್ರಿಸ್ತ ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕ್ಯಾಥೆಡ್ರಲ್'ನ ಪ್ರಧಾನ ಧರ್ಮಗುರು ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ವಂ.ಪ್ರದೀಪ್ ಕರ್ಡೋಜಾ, ಧರ್ಮಪ್ರಾಂತ್ಯದ ಸಂಪದ ಸಂಸ್ಥೆ ನಿರ್ದೇಶಕ ವಂ.ರೆಜಿನಾಲ್ಡ್ ಪಿಂಟೊ ಮೊದಲಾದವರಿದ್ದರು.
ಪವಿತ್ರ ಗುರುವಾರದ ಅಂಗವಾಗಿ ಚರ್ಚುಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ನಡೆದವು.
ಪವಿತ್ರ ಗುರುವಾರದ ಬಳಿಕ ಶುಕ್ರವಾರದಂದು ಏಸುಸ್ವಾಮಿಯನ್ನು ಶಿಲುಬೆಗೇರಿಸಿದ್ದು ಶುಕ್ರವಾರವನ್ನು ಕ್ರೈಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ ಹಾಗೂ ಏಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸುವ ಮೂಲಕ ಆಚರಿಸಲಿದ್ದಾರೆ.
ತೊಟ್ಟಂ ಚರ್ಚಿನಲ್ಲಿ ವಿಶಿಷ್ಟ `ಪವಿತ್ರ ಗುರುವಾರ'
ಮಲ್ಪೆ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ಗುರುವಾರವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದಲ್ಲಿ ಪ್ರಸ್ತುತ ವರ್ಷವನ್ನು ಬಡವರ ವರ್ಷವಾಗಿ ಆಚರಿಸಲಾಗುತ್ತಿದ್ದು ತೊಟ್ಟಂ ಚರ್ಚ್ ವ್ಯಾಪ್ತಿಯ 12 ಮಂದಿ ವಿಶಿಷ್ಟ ವ್ಯಕ್ತಿಗಳನ್ನು ಗುರುತಿಸಿ ಅವರ ಪಾದಗಳನ್ನು ಚರ್ಚ್ ಧರ್ಮಗುರು ವಂ.ಡೆನಿಸ್ ಡೆಸಾ ತೊಳೆದು ಏಸುಸ್ವಾಮಿ ತೋರಿದ ಸರಳತೆಯ ಸಂದೇಶವನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾನ್ವೆಂಟಿನ ಸುಪಿರೀಯರ್ ಸಿಸ್ಟರ್ ಸುಷ್ಮಾ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷೆ ಲೆಸ್ಲಿ ಆರೋಝಾ, ಕಾರ್ಯದರ್ಶಿ ಲವೀನಾ ಫೆರ್ನಾಂಡಿಸ್, 20 ಆಯೋಗಗಳ ಸಂಚಾಲಕಿ ಶಾಂತಿ ಫೆರ್ನಾಂಡಿಸ್ ಮೊದಲಾದವರಿದ್ದರು.
.jpg)