ಇಂಧನ ದರ ಏರಿಕೆ ಮೂಲಕ ಜನತೆಗೆ ಕೇಂದ್ರದ ಬರೆ

ಲೋಕಬಂಧು ನ್ಯೂಸ್ | ಉಡುಪಿ, ಮೇ 25
ದೇಶದಲ್ಲಿ ಮತ್ತೆ ಇಂಧನ ದರ ಏರಿಕೆ ಮೂಲಕ ಕೇಂದ್ರದ ಮೋದಿ ಸರಕಾರ ಜನರ ಮೇಲೆ ಬರೆ ಹಾಕಿದೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ನವೀನ್ ಸಾಲಿಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಮತ್ತೆ ಪೆಟ್ರೋಲ್ ದರವನ್ನು ಲೀಟರ್‌ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದ್ದು, ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ.


ಮೇ 15ರಿಂದ ಆರಂಭವಾದ ಈ ಸರಣಿ ಏರಿಕೆಯಿಂದ ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸುಮಾರು ರೂ.7.5ರಷ್ಟು ಹೆಚ್ಚಳವಾಗಿರುವುದು ಸಾಮಾನ್ಯ ಜನರಲ್ಲಿ ಆತಂಕ ಮೂಡಿಸಿದೆ.


ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ, ಆಹಾರ ವಸ್ತುಗಳ ಬೆಲೆ, ಕೈಗಾರಿಕಾ ಉತ್ಪಾದನಾ ವೆಚ್ಚ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬೆಲೆ ಏರಿಕೆಯ ಭೀತಿ ಎದುರಾಗಿದೆ.


ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ವಿರುದ್ಧ ಭಾರತೀಯರೆಲ್ಲರೂ ಒಗ್ಗಟ್ಟಿನಿಂದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ನಿಂತು, ಸರಕಾರ ಪತನವಾಗುವ ಪ್ರಮೇಯ ಬರಬಹುದು. ಈಗಾಗಲೇ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಈ ಬಗ್ಗೆ ಮಾತನಾಡುತ್ತಿದ್ದು ಬಿಜೆಪಿ ಸರ್ಕಾರ ಬೇರೆ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ನೆಪವೊಡ್ಡಿ ಭಾರತದ ಜನಸಾಮಾನ್ಯರ ಮೇಲೆ ಹೇರುತ್ತಿರುವ ಬೆಲೆ ಏರಿಕೆ ಖಂಡನೀಯ ಎಂದು ತಿಳಿಸಿದ್ದಾರೆ.


ಬೆಲೆ ಏರಿಕೆ ವಿರುದ್ಧ ಈಗಾಗಲೇ ಹಲವಾರು ಪ್ರತಿಭಟನೆಗಳನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮಾಡಿದ್ದು ದಿನೇ ದಿನೇ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರಲ್ಲಿ ಚರ್ಚಿಸಿ ಉಡುಪಿ ಜಿಲ್ಲೆಯ ಪ್ರತೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಲೆಯೇರಿಕೆ ವಿರುದ್ಧ ಹಳ್ಳಿ ಹಳ್ಳಿಗಳಲ್ಲಿ ಯುವ ಕಾಂಗ್ರೆಸ್ ತೀವ್ರ ಹೋರಾಟ ಮಾಡಲಿದೆ ಎಂದು ನವೀನ್ ಸಾಲಿಯಾನ್ ಎಚ್ಚರಿಸಿದ್ದಾರೆ.