ಲೋಕಬಂಧು ನ್ಯೂಸ್ | ನವದೆಹಲಿ, ಮೇ 27
ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿರುವ ರಾಜ್ಯ ರಾಜಕಾರಣದ ಚರ್ಚೆ ನವದೆಹಲಿಯಲ್ಲಿ ಮಂಗಳವಾರ ಇಡೀ ದಿನ ನಡೆದಿದ್ದು, ಕಾಂಗ್ರೆಸ್ ಹೈಕಮಾಂಡ್ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ಸೇರಿದಂತೆ ಹಿರಿಯ ಸಚಿವರು ಆಪ್ತರು ಚರ್ಚೆ ನಡೆಸಿ ಸಂಜೆಯ ವರೆಗೂ ಮಾತುಕತೆ ನಡೆಸಿದ್ದಾರೆ.
ಇಡೀ ದಿನ ನಡೆದ ರಾಜಕೀಯ ಚರ್ಚೆ ಹಾಗೂ ವದಂತಿಗಳ ನಡುವೆ ಸಂಜೆ ಸುದ್ದಿಗೋಷ್ಠಿ ನಡೆಸಿ ಎಲ್ಲದಕ್ಕೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೆರೆ ಎಳೆದಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮುಂಬರುವ ವಿಧಾನ ಪರಿಷತ್ ಚುನಾವಣೆ ಮತ್ತು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯತಂತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳು ಕೇವಲ ಊಹೆಯಾಗಿದೆ. ಸಭೆಯಲ್ಲಿ ಚುನಾವಣೆ ವಿಷಯ ಬಿಟ್ಟು ಬೇರೆ ಯಾವುದೇ ವಿಷಯದ ಬಗ್ಗೆ ಚರ್ಚೆ ಆಗಿಲ್ಲ ಎಂದವರು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಪ್ರಶ್ನೆಗೆ ಯಾವ ನಾಯಕರು ಉತ್ತರಿಸಿದೆ ಮೌನವಾಗಿ ತೆರಳಿದರು.