ಲೋಕಬಂಧು ನ್ಯೂಸ್ | ಉಡುಪಿ, ಜೂ.18
ಉಡುಪಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರಸಭೆಯ ಆಡಳಿತಾತ್ಮಕ ದಾಖಲೆಗಳು, ಬಾಕಿ ಉಳಿದಿರುವ ಅರ್ಜಿಗಳು ಹಾಗೂ ವಿವಿಧ ಕಡತಗಳ ವಿಲೇವಾರಿ ಪ್ರಕ್ರಿಯೆ ಪರಿಶೀಲಿಸುತ್ತಿದ್ದಾರೆ.
ನಗರಸಭೆಯಲ್ಲಿ ಕೆಲವು ಕಡತಗಳು ದೀರ್ಘಕಾಲದಿಂದ ವಿಲೇವಾರಿಯಾಗದೇ ಅನಗತ್ಯವಾಗಿ ಬಾಕಿ ಉಳಿದುಕೊಂಡಿವೆ ಎಂಬ ಸಾರ್ವಜನಿಕರ ಆರೋಪಗಳು ಕೇಳಿಬಂದಿದ್ದವು. ಆ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಾಳಿ ವೇಳೆ ವಿವಿಧ ವಿಭಾಗಗಳ ಕಾರ್ಯವೈಖರಿ, ಕಡತಗಳ ನಿರ್ವಹಣೆ ಹಾಗೂ ಸಾರ್ವಜನಿಕ ಅರ್ಜಿಗಳ ವಿಲೇವಾರಿ ಸ್ಥಿತಿ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಡಿವೈಎಸ್.ಪಿ. ಹಾಲಮೂರ್ತಿ ರಾವ್ ಉಡುಪಿ ಹಾಗೂ ಡಿವೈಎಸ್.ಪಿ. ಸುರೇಶ್ ಕುಮಾರ್ ಮಂಗಳೂರು ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಾಜೇಂದ್ರ ನಾಯ್ಕ ಮತ್ತು ಚಂದ್ರಶೇಖರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
