ಪ್ರತಿಭಾವಂತ ವಿದ್ಯಾರ್ಥಿಗಳು ದೇಶದ ಆಸ್ತಿ

ಲೋಕಬಂಧು ನ್ಯೂಸ್ | ಉಡುಪಿ, ‌ಜೂ.26
ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ, ಗರಿಷ್ಟ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ದೇಶದ ದೊಡ್ಡ ಸಂಪನ್ಮೂಲವಾಗಿದ್ದಾರೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.
ಪರ್ಯಾಯ ಶೀರೂರು ಶ್ರೀಕೃಷ್ಣ ಮಠ ಆಶ್ರಯದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಘಟಕ ವತಿಯಿಂದ ಶುಕ್ರವಾರ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಬಾರಿಯ ಎಸ್ಎಸ್ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯದ 1,200 ಸ್ಕೌಟ್ಸ್, ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಹೆಚ್ಚು ಅಂಕ ಗಳಿಸಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಕೇವಲ ಕುಟುಂಬ ಅಥವಾ ಊರಿಗೆ ಮಾತ್ರ ಕೀರ್ತಿ ತಂದಿಲ್ಲ. ಬದಲಿಗೆ ದೇಶಕ್ಕೇ ಆಸ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.


8ರಿಂದ 13 ವರ್ಷದೊಳಗಿನ ಮಕ್ಕಳು ಒಂದು ತಿಂಗಳ ಕಾಲ ಮೊಬೈಲ್, ಟಿವಿಯಿಂದ ದೂರವಿದ್ದು ಯೋಗಾಭ್ಯಾಸದಲ್ಲಿ ತೊಡಗಿಕೊಂಡರೆ ಅವರ ಮೆದುಳು ಸೂಪರ್ ಕಂಪ್ಯೂಟರ್'ನಂತೆ ಕೆಲಸ ಮಾಡುತ್ತದೆ. ಸ್ಕೌಟ್ಸ್ ಮತ್ತು ಗೈಡ್ಸ್ ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ ಪರಿಸರ ಜ್ಞಾನ, ಸ್ವಚ್ಛತೆ, ಪ್ರಾಣಿ- ಸಸ್ಯಗಳ ಸಂರಕ್ಷಣೆ, ಮಣ್ಣು ಮತ್ತು ನೀರಿನ ಉಳಿತಾಯದಂಥ ಜೀವನ ಮೌಲ್ಯಗಳನ್ನು ಕಲಿಸುತ್ತದೆ ಎಂದರು.


ಕಾಲೇಜು ವಿಭಾಗದ ವಿದ್ಯಾರ್ಥಿಗಳು ರಾಷ್ಟ್ರಪತಿ ಪರೀಕ್ಷೆ ಉತ್ತೀರ್ಣರಾದರೆ ಎಂಬಿಬಿಎಸ್, ಎಂಜಿನಿಯರಿಂಗ್, ಐಎಎಸ್.ನಲ್ಲಿ ಮಾತ್ರವಲ್ಲದೆ ರೈಲ್ವೆ ಇಲಾಖೆ, ಪೊಲೀಸ್ ಮತ್ತು ರಕ್ಷಣಾ ಇಲಾಖೆಗಳಂಥ ಉದ್ಯೋಗಗಳಲ್ಲಿ ವಿಶೇಷ ಮೀಸಲಾತಿ ಹಾಗೂ ಆದ್ಯತೆ ದೊರೆಯಲಿದೆ ಎಂದರು.
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಕ್ಕಳು ದೇಶ ಪ್ರೇಮ ಮೈಗೂಡಿಸಿಕೊಂಡು ಗುರು- ಹಿರಿಯರನ್ನು ಗೌರವಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು .


ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶಪಾಲ್ ಸುವರ್ಣ, ಡಿಡಿಪಿಯು ಮಾರುತಿ, ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಪೈ, ಕಾರ್ಯದರ್ಶಿ ಆನಂದ ಅಡಿಗ, ಕೋಶಾಧಿಕಾರಿ ಹರಿಪ್ರಸಾದ್ ರೈ ಮಣಿಪಾಲ, ಲಯನ್ಸ್ ಸಂಸ್ಥೆಯ ಎಂ.ಎನ್. ಹೆಗಡೆ, ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳಾದ ಗುಣರತ್ನ, ದಿವಾಕರ ಸನಿಲ್, ಮಹಮ್ಮದ್ ಮೌಲಾ, ಎಎಸ್ಒ ಸುಮನಾ ಶೇಖರ್ ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಕಬ್, ಬುಲ್ ಬುಲ್ ಮಕ್ಕಳ 'ಗೋಲ್ಡನ್ ಆರೋ' ಪ್ರಶಸ್ತಿ ಹಾಗೂ 'ರಾಷ್ಟ್ರಪತಿ ಪ್ರಮಾಣಪತ್ರ' ವಿತರಿಸಲಾಯಿತು.