ಲೋಕಬಂಧು ನ್ಯೂಸ್ | ಉಡುಪಿ, ಜು.9
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ವಿಳಂಬ ದಾಖಲಾತಿ ದಂಡ ಶುಲ್ಕವನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಕ್ರಮವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಸ್ವಾಗತಿಸಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
2026-27ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ 10 ದಿನಗಳ ವಿಳಂಬ ದಾಖಲಾತಿಗೆ 670 ರೂ. ದಂಡ ಶುಲ್ಕ ಹಾಗೂ 20 ದಿನಗಳ ವಿಳಂಬ ದಾಖಲಾತಿಗೆ 2,220 ರೂ. ವಿಶೇಷ ದಂಡ ಶುಲ್ಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಆರ್ಥಿಕ ಭಾರದಿಂದ ಮುಕ್ತಿ ನೀಡಲಾಗಿದೆ.
ಸರ್ಕಾರದ ಈ ನಿರ್ಧಾರದಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಯಾವುದೇ ವಿದ್ಯಾರ್ಥಿ ಕೇವಲ ಆರ್ಥಿಕ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗದಂತೆ ಸರ್ಕಾರ ಕಾಳಜಿ ವಹಿಸಿರುವುದು ಶ್ಲಾಘನೀಯ ಎಂದು ಹರೀಶ್ ಕಿಣಿ ತಿಳಿಸಿದ್ದಾರೆ.
ಶಿಕ್ಷಣಕ್ಕೆ ಆದ್ಯತೆ ನೀಡುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಈ ಜನಪರ ನಿರ್ಧಾರ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಮಹತ್ತರ ನೆರವಾಗಲಿದೆ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಈ ವಿದ್ಯಾರ್ಥಿ ಸ್ನೇಹಿ ಕ್ರಮಕ್ಕಾಗಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಹಾಗೂ ರಾಜ್ಯ ಸರ್ಕಾರಕ್ಕೆ ಅಲೆವೂರು ಹರೀಶ್ ಕಿಣಿ ಅಭಿನಂದನೆ ಸಲ್ಲಿಸಿದ್ದಾರೆ.
