ಲೋಕಬಂಧು ನ್ಯೂಸ್ | ಉಡುಪಿ, ಜು.1
2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ನೋಂದಣಿ ಅವಧಿ ಜೂನ್ 30ಕ್ಕೆ ಮುಕ್ತಾಯಗೊಂಡಿದ್ದು, ಅದನ್ನು ಒಂದು ತಿಂಗಳ ಅವಧಿಗೆ ವಿಸ್ತರಿಸುವಂತೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರದ ಕೃಷಿ ಮತ್ತು ತೋಟಗಾರಿಕೆ ಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ಕೇಂದ್ರದ ಕೃಷಿ ಕಾರ್ಯದರ್ಶಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ವಿಶೇಷವಾಗಿ ಅಡಿಕೆ, ಕಾಳುಮೆಣಸು ಸೇರಿದಂತೆ ಇತರ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ರೈತರು ಆಸಕ್ತಿ ಹೊಂದಿದ್ದು ನಿಗದಿತ ದಿನದೊಳಗೆ ನೋಂದಣಿ ಪೂರ್ಣಗೊಂಡಿಲ್ಲ. ಜಿಲ್ಲೆಯಲ್ಲಿ ತಡವಾಗಿ ಬಂದ ಮಳೆ ಮತ್ತು ಪ್ರತಿಕೂಲ ಹವಾಮಾನ ಕೃಷಿ ಚಟುವಟಿಕೆ ಹಾಗೂ ರೈತಾಪಿ ವರ್ಗದ ಕೆಲಸದ ಒತ್ತಡ ಹಾಗೂ ಸಾಲು ಸಾಲಾಗಿ ಬಂದ ಸರ್ಕಾರಿ ರಜೆಗಳಿಂದ ಬ್ಯಾಂಕ್ ವ್ಯವಹಾರ ಸ್ಥಗಿತವಾಗಿದ್ದು, ರೈತರು ವಿಮಾ ಸೌಲಭ್ಯ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ.
ಅಲ್ಲದೆ, ಬೆಳೆ ವಿಮೆ ಯೋಜನೆಯಡಿ ತಾಂತ್ರಿಕ ದೋಷ ಸರಿಪಡಿಸುವುದು ವಿಳಂಬವಾದ ಹಿನ್ನೆಲೆಯಲ್ಲಿ ಅನೇಕ ರೈತರು ವಿಮಾ ಯೋಜನೆ ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಆ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳ ಕಾಲ ಅವಧಿ ವಿಸ್ತರಿಸಿ, ರೈತರು ಯೋಜನೆಯ ಪ್ರಯೋಜನ ಪಡೆಯುವಂತಾಗಲು ಸಹಕರಿಸುವಂತೆ ಪತ್ರದಲ್ಲಿ ಸಂಸದ ಕೋಟ ವಿವರಿಸಿದ್ದಾರೆ.
