ಲೋಕಬಂಧು ನ್ಯೂಸ್ | ಉಡುಪಿ, ಜು.30
ಇಲ್ಲಿನ ಜಟ್ಕಾ ಸ್ಟ್ಯಾಂಡ್ ಬಳಿ ಜು.31ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಈ ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದು ಉಡುಪಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಗಳು ನಡೆದರೆ ಅದಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯೇ ನೇರ ಹೊಣೆಯಾಗಲಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ವಾರ ಮಣಿಪಾಲದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾದಕ ವ್ಯಸನಿಗಳು, ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳು ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಗೆ ಅವಾಚ್ಯ ಪದಗಳನ್ನು ಬಳಸಿ ಅವಹೇಳನ ಮಾಡಿದ್ದರು, ದೇಶದ್ರೋಹದ ಘೋಷಣೆಗಳನ್ನು ಕೂಗಿರುವ ಘಟನೆಗಳೂ ನಡೆದಿದ್ದು, ಇದೀಗ ಈ ಪ್ರತಿಭಟನೆಯನ್ನು ಸಮರ್ಥಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ನಲ್ಲಿ ಅಂಥ ಮನಸ್ಥಿತಿಯ ವ್ಯಕ್ತಿಗಳು ಭಾಗವಹಿಸುವ ಸಾಧ್ಯತೆ ಇದೆ.
ಈಗಾಗಲೇ ಉಡುಪಿಯ ಕಾಂಗ್ರೆಸ್ ಮುಖಂಡರು ಶಾಸಕ ಯಶಪಾಲ್ ಸುವರ್ಣ ವಿರುದ್ಧ ರಾಜಕೀಯ ಪ್ರೇರಿತ ಕೇಸುಗಳನ್ನು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ಪುಂಡರು ಶಾಸಕರ ಕಚೇರಿಗೆ ಮುತ್ತಿಗೆ ಹಾಕುವ ವಿಫಲ ಯತ್ನ ಮಾಡಿದ್ದಾರೆ. ಶಾಸಕರ ಕಚೇರಿ ಹಾಗೂ ಮನೆಗೆ ಮುತ್ತಿಗೆ ಹಾಕುವ ಘೋಷಣೆ ಮೂಲಕ ಬಿಜೆಪಿ ಕಾರ್ಯಕರ್ತರ ತಾಳ್ಮೆ ಪರೀಕ್ಷೆ ಮಾಡುತ್ತಿದ್ದು, ಈ ದುಸ್ಸಾಹಸಕ್ಕೆ ಕಾಂಗ್ರೆಸ್ ಮುಂದಾದರೆ ಬಿಜೆಪಿ ಕಾರ್ಯಕರ್ತರು ತಕ್ಕ ಉತ್ತರ ನೀಡಲಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸುವ ಹೊರ ಜಿಲ್ಲೆಯ ಅನುಮಾಸ್ಪದ ಹಾಗೂ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಬಗ್ಗೆ ಗುಪ್ತಚರ ಇಲಾಖೆ ವಿಶೇಷ ನಿಗಾ ವಹಿಸಿ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ದಿನೇಶ್ ಅಮೀನ್ ಆಗ್ರಹಿಸಿದ್ದಾರೆ.
