ಲೋಕಬಂಧು ನ್ಯೂಸ್ | ನವದೆಹಲಿ, ಜು.31
ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರತಿಪಕ್ಷದ ಸಂಸದರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಪೂರ್ಣಿಯಾದ ಸ್ವತಂತ್ರ ಸಂಸದ ಪಪ್ಪು ಯಾದವ್ ಸನ್ಯಾಸಿ ವೇಷ ಧರಿಸಿ ಸಂಸತ್ ಸಂಕೀರ್ಣಕ್ಕೆ ಆಗಮಿಸಿದ್ದು ಗಮನ ಸೆಳೆಯಿತು.
ಪಪ್ಪು ಯಾದವ್ ಮುಂದೆ ಸಾಂಕೇತಿಕ ದೇಣಿಗೆ ಪೆಟ್ಟಿಗೆಯನ್ನು ಇರಿಸಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷದ ಹಲವು ಸಂಸದರು ಆ ಪೆಟ್ಟಿಗೆಗೆ ಸಾಂಕೇತಿಕವಾಗಿ ಹಣ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಪ್ರತಿಭಟನೆಯಲ್ಲಿ ಭಾಗವಹಿಸಿ ದೇಣಿಗೆ ಪೆಟ್ಟಿಗೆಗೆ ಹಣ ಹಾಕಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.
ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಪಕ್ಷದ ಸದಸ್ಯರು 'ಕಳ್ಳನಿಗೆ ಅರ್ಪಿಸಿ– ಸಿಂಹಾಸನವನ್ನು ಬಿಟ್ಟುಬಿಡಿ!' ಎಂಬ ಘೋಷಣೆಗಳನ್ನು ಕೂಗಿದರು. ರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಈ ಬಗ್ಗೆ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿವೆ.
ಸ್ಪೀಕರ್ ಅಸಮಾಧಾನ
ಇನ್ನೊಂದೆಡೆ, ಈ ಘಟನೆಗೆ ಲೋಕಸಭೆ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದ್ದು ಸಂಸತ್ತು ಹಾಗೂ ಅದರ ಆವರಣದ ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬ ಸದಸ್ಯರ ಜವಾಬ್ದಾರಿ. ಸಂಸದರು ವೇಷಭೂಷಣಗಳ ಮೂಲಕ ಪ್ರತಿಭಟನೆ ನಡೆಸುವುದು ಸರಿಯಲ್ಲ. ಸದನದ ಸಭ್ಯತೆ ಮತ್ತು ಸಂಸದೀಯ ಸಂಪ್ರದಾಯಗಳನ್ನು ಪಾಲಿಸುವಂತೆ ಸಲಹೆ ನೀಡಿದರು.
ಘಟನೆ ಬಳಿಕ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಗಂಟೆ ವರೆಗೆ ಮುಂದೂಡಲಾಯಿತು.
ಆದರೆ, ಪ್ರತಿಪಕ್ಷಗಳು ಪ್ರತಿಭಟನೆ ಪ್ರಜಾಪ್ರಭುತ್ವದ ಭಾಗವಾಗಿದ್ದು, ಸರ್ಕಾರದಿಂದ ವಿವಿಧ ವಿಷಯಗಳ ಕುರಿತು ಉತ್ತರ ಪಡೆಯುವ ಉದ್ದೇಶದಿಂದ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿವೆ.
ರಾಮ ಮಂದಿರ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ರಾಜಕೀಯ ವಲಯದಲ್ಲಿ ಆರೋಪ–ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಈ ವಿಚಾರ ಮುಂದಿನ ದಿನಗಳಲ್ಲಿ ಸಂಸತ್ತಿನ ಚರ್ಚೆಯ ಪ್ರಮುಖ ವಿಷಯವಾಗುವ ಸಾಧ್ಯತೆ ಇದೆ.
