ಲೋಕಬಂಧು ನ್ಯೂಸ್ | ಉಡುಪಿ, ಆ.23
ಇಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನ 2025-26ನೇ ಸಾಲಿನ ಸರ್ವತೋಮುಖ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆ ಮೂಲಕ ಬ್ಯಾಂಕ್ ಸತತ 10ನೇ ಬಾರಿಗೆ ಈ ಪ್ರಶಸ್ತಿ ಪಡೆದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕ್ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಪ್ರಶಸ್ತಿ ಸ್ವೀಕರಿಸಿದರು.
ಯಶಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ರೂ. 1,200 ಕೋಟಿಗೂ ಮಿಕ್ಕಿ ಒಟ್ಟು ವ್ಯವಹಾರ ನಡೆಸಿದ್ದು, ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಠಿತ ಸಾಧನಾ ಪ್ರಶಸ್ತಿ ಮೂಲಕ ಗೌರವಿಸಲಾಗಿದೆ.
