ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ನಿಧನ

ಲೋಕಬಂಧು ನ್ಯೂಸ್ ಬೆಂಗಳೂರು, ಆ.18
ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.

ಆರ್‌ಎಸ್‌ಎಸ್ ಕಟ್ಟಾ ಕಾರ್ಯಕರ್ತರಾಗಿದ್ದ ನಾಗೇಶ್ ಅವರು 2008 ಮತ್ತು 2018ರಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.


ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಸದಸ್ಯರಾಗಿ ರಾಷ್ಟ್ರ ಸೇವೆಗೆ ಸಮರ್ಪಿತರಾಗಿದ್ದ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿ ದೆಸೆಯಿಂದಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.


ತುಮಕೂರಿನ ಬಿ.ಎಂ. ಶ್ರೀನಿವಾಸಯ್ಯ ಎಂಜಿನಿಯರಿಂಗ್ ಕಾಲೇಜಿನಿಂದ ಎಂಜಿನಿಯರಿಂಗ್ ಪದವಿ ಪಡೆದಿದ್ದ ಬಿ.ಸಿ. ನಾಗೇಶ್, ತದನಂತರ 1984ರಲ್ಲಿ ಬಿಜೆಪಿ ಸೇರ್ಪಡೆಗೊಂಡು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿಕಟವರ್ತಿಯಾಗಿದ್ದರು. ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು.